ಬೆಂಗಳೂರು ಗ್ರಾಮಾಂತರ: ರಾಜ್ಯದಲ್ಲಿ ಕರೊನಾ ಮೂರನೇ ಅಲೆ ಆತಂಕ ಎದುರಾಗಿದ್ದು ನಾವೆಲ್ಲರೂ ಸೇರಿ ಸಮರ್ಥವಾಗಿ ಎದುರಿಸಬೇಕು ಎಂದು ಸಚಿವ ಎಂಟಿಬಿ ನಾಗರಾಜ್ ಸಲಹೆ ನೀಡಿದರು.
ಹೊಸಕೋಟೆಯಲ್ಲಿ ಸೋಮವಾರ ಕಾರ್ಮಿಕ ಇಲಾಖೆಯಿಂದ ಮಡಿವಾಳ ಸಮುದಾಯದವರಿಗೆ ಹಮ್ಮಿಕೊಂಡಿದ್ದ ದಿನಸಿಕಿಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕರೊನಾ ಮೊದಲ ಹಾಗೂ ಎರಡನೇ ಅಲೆ ವೇಳೆ ಲಾಕ್ಡೌನ್ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕಟ್ಟಡ ಕಾರ್ಮಿಕರು, ಬಡವರು, ನಿರ್ಗತಿಕರು, ವಲಸಿಗರು, ಅಗತ್ಯ ಇರುವವರೆಗೆ ಸ್ವಂತ ಖರ್ಚಿನಲ್ಲಿ ದಿನಸಿ ಕಿಟ್ ವಿತರಣೆ ಮಾಡಿದ್ದು, ಈಗಲೂ ಸೇವೆ ಮುಂದವರಿಸಲಾಗಿದೆ ಎಂದರು.
ಕರೊನಾ ಮೂರನೇ ಅಲೆ ಬಗ್ಗೆ ತಜ್ಞರು ಈ ಹಿಂದೆಯೇ ಎಚ್ಚರಿಕೆ ನೀಡಿದ್ದರು. ನೆರೆ ರಾಜ್ಯಗಳಲ್ಲಿ ಈಗಾಗಲೇ 3ನೇ ಅಲೆ ಸೋಂಕಿತ ಪ್ರಕರಣ ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಯಲ್ಲಿ ಸೋಂಕನ್ನು ಪರಿಣಾಮಕಾರಿ ನಿಯಂತ್ರಣ ಮಾಡಲು ಪೂರ್ವ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಭಿಯಾನದ ಮಾದರಿಯಲ್ಲಿ ಕೋವಿಡ್ ಲಸಿಕೆ ಪೂರೈಸುತ್ತಿದೆ. ಪ್ರತಿಯೊಬ್ಬರೂ ಲಸಿಕೆ ಪಡೆದು ಕರೊನಾ ಸೋಂಕಿನಿಂದ ರಕ್ಷಣೆ ಪಡೆಯಬೇಕು. ಹಾಗೆಯೇ ಕರೊನಾ ಮಾರ್ಗಸೂಚಿ ಪಾಲಿಸಬೇಕು ಎಂದು ಸಲಹೆ ನೀಡಿದರು.
ಕರೊನಾ ಮಹಾಮಾರಿ ಸಾಕಷ್ಟು ಜನರ ಬಲಿದಾನ ಪಡೆದಿದೆ. ವ್ಯಾಕ್ಸಿನ್ ಮೂಲಕ ಸೋಂಕು ಹಿಮ್ಮೆಟ್ಟಿಸಲು ಪ್ರಯತ್ನಿಸಲಾಗುತ್ತಿದೆ. ಕರೊನಾ ಲಾಕ್ಡೌನ್ ತೆರವಾಗಿದ್ದರೂ ಪರಿಸ್ಥಿತಿ ಸಹಜ ಸ್ಥಿತಿಗೆ ಬರಲು ಸಾಕಷ್ಟು ಸಮಯಾವಕಾಶ ಬೇಕಿದೆ. ಇದರ ನಡುವೇ ಮೂರನೇ ಅಲೆ ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಹೊಸಕೋಟೆ ತಾಲೂಕಿನಲ್ಲಿ ಸ್ವಂತ ಖರ್ಚಿನಲ್ಲಿ ಉಚಿತವಾಗಿ ಲಸಿಕೆ ಹಾಕುವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
22 ಸಾವಿರ ವ್ಯಾಕ್ಸಿನ್: ಕರೊನಾ ಲಾಕ್ಡೌನ್ನಿಂದ ಕಂಗೆಟ್ಟಿರುವ ಬಡವರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಎಂಟಿಬಿ ಚಾರಿಟಬಲ್ ಟ್ರಸ್ಟ್ನಿಂದ ಉಚಿತ ವ್ಯಾಕ್ಸಿನ್ ಅಭಿಯಾನ ಹಮ್ಮಿಕೊಂಡಿದ್ದು, ಇದೂವರೆಗೆ ಹೊಸಕೋಟೆ ತಾಲೂಕಿನಲ್ಲಿ 22 ಸಾವಿರ ಲಸಿಕೆಯನ್ನು ಉಚಿತವಾಗಿ ನೀಡಲಾಗಿದೆ ಎಂದು ಸಚಿವರು ತಿಳಿಸಿದರು. ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ ಅಭಿಯಾನವನ್ನು ಮತ್ತಷ್ಟು ಹೆಚ್ಚಿಸುವ ಬಗ್ಗೆ ಕಾರ್ಯೋನ್ಮುಖರಾಗಿದ್ದೇವೆ ಎಂದರು