ಗುಡಿಬಂಡೆ: ಸರ್ಕಾರಿ ಶಾಲಾ ಕಾಲೇಜುಗಳಲ್ಲಿನ ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣೆ ಕಲೆಯ ಮಾರ್ಗದರ್ಶನ ನೀಡಿಲು ದೈಹಿಕ ಶಿಕ್ಷಣ ಶಿಕ್ಷಕರಿಗೆ ತರಬೇತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.
ಗುಡಿಬಂಡೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ತಾಲೂಕು ಆಡಳಿತ, ತಾಪಂ, ಪಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳವಾರ ಕೈಗೊಂಡಿದ್ದ ವಿದ್ಯಾರ್ಥಿನಿಯರ ಆತ್ಮರಕ್ಷಣೆ ಕಲೆಯ ಬೃಹತ್ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದರು.
ಗುಡಿಬಂಡೆ ತಾಲೂಕಿನಲ್ಲಿ ಅತಿ ಹೆಚ್ಚು ಬಾಲ್ಯವಿವಾಹ ಪ್ರಕರಣಗಳು ಪತ್ತೆಯಾಗಿವೆ, ಇದಕ್ಕೆ ಸಂಪೂರ್ಣವಾಗಿ ಕಡಿವಾಣ ಹಾಕಲು ಎಲ್ಲರೂ ಧ್ವನಿ ಎತ್ತಬೇಕು. ಒಂದು ವೇಳೆ ಪ್ರಕರಣಗಳು ಕಂಡು ಬಂದಲ್ಲಿ ಹೆಣ್ಣು ಮಕ್ಕಳ ಸಹಾಯವಾಣಿ ಸಂಖ್ಯೆ 1098 ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದರು.
ಹೆಣ್ಣುಮಕ್ಕಳು ಗಂಡು ಮಕ್ಕಳಿಗಿಂತ ಬಲಿಷ್ಠರು ಎನ್ನಲಾಗುತ್ತದೆ. ಮನೆಯಲ್ಲಿ ದಿನನಿತ್ಯದ ಕೆಲಸಗಳಿಂದ ಹಿಡಿದು ಕಚೇರಿಯ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಾರೆ. ಸಮಾಜದ ಅಭಿವೃದ್ಧಿಯಲ್ಲೂ ಮಹಿಳೆಯರು ಮುಖ್ಯ ಪಾತ್ರ ವಹಿಸುತ್ತಿರುವುದು ಶ್ಲಾಘನೀಯ ಎಂದರು.
1,100 ವಿದ್ಯಾರ್ಥಿನಿಯರು ಕರಾಟೆ ಪ್ರದರ್ಶಿಸಿದರು. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರೇಣುಕಾ, ಜಿಪಂ ಸದಸ್ಯ ವರಲಕ್ಷ್ಮೀ, ತಹಸೀಲ್ದಾರ್ ಹನುಮಂತರಾಯಪ್ಪ ಇತರರಿದ್ದರು.