ಚಿತ್ರದುರ್ಗ: ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಜಿಪಂ ಸಿಇಒ ಅಧೀನಕ್ಕೆ ವಹಿಸಿರುವ ರಾಜ್ಯ ಸರ್ಕಾರದ ಆದೇಶ ವಿರೋಧಿಸಿ ಪಿಯು ಕಾಲೇಜು ಪ್ರಾಚಾರ್ಯರು, ಉಪನ್ಯಾಸಕರು, ಬೋಧಕೇತರ ಸಂಘಗಳ ಒಕ್ಕೂಟದ ಸದಸ್ಯರು ಗುರುವಾರ ನಗರದಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಸರ್ಕಾರದ ಕ್ರಮ ವಿರೋಧಿಸಿದರು.
ಸರ್ಕಾರ ಕೂಡಲೇ ತನ್ನ ಆದೇಶ ಹಿಂಪಡೆಯಬೇಕು. ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ ಎಂದು ನವೀಕರಿಸಿರುವ ಹೆಸರಿನ ಬದಲಿಸಲಾಗಿದೆ. ಕರ್ನಾಟಕ ಪಬ್ಲಿಕ್ಸ್ಕೂಲ್ ಹೆಸರಿನಡಿ ಪಿಯು ಹಂತವನ್ನು ಪ್ರೌಢಶಾಲೆಗಳಲ್ಲಿ ವಿಲೀನ ಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ. ಇದನ್ನು ಕೈಬಿಟ್ಟು ಪದವಿ ಪೂರ್ವ ಶಿಕ್ಷಣ ಇಲಾಖೆ ಎಂಬ ಹೆಸರನಡಿ, ಇಲಾಖೆಯನ್ನೇ ಪ್ರತ್ಯೇಕವಾಗಿ ಮುಂದುವರಿಸಬೇಕು ಎಂದು ಆಗ್ರಹಿಸಿದರು.
ಹಿಂದೆ ಎಸ್.ಬಂಗಾರಪ್ಪ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ ವೀರಪ್ಪ ಮೊಯ್ಲಿ ಅವರು ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ದೇಶದಲ್ಲೇ ಮಾದರಿ ಎಂಬಂತೆ ರೂಪಿಸಿದರು. ಆದರೆ, ಇಂದು ಬಂಗಾರಪ್ಪ ಅವರ ಪುತ್ರ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಲಾಖೆ ಅಸ್ತಿತ್ವಕ್ಕೆ ಧಕ್ಕೆ ತರುತ್ತಿದ್ದಾರೆ ಎಂದು ದೂರಿದರು.
ಇಲಾಖೆಯನ್ನು ಜಿಪಂ ಸಿಇಒ ಅಧೀನಕ್ಕೆ ವಹಿಸಿರುವ ಆದೇಶ ಹಿಂಪಡೆಯುವುದು ಸೇರಿ ಹಲವು ಬೇಡಿಕೆಗಳನ್ನು ಈಡೇರಿಸಬೇಕು. ಸ್ಪಂದಿಸದಿದ್ದರೆ ಡಿ.1ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿ ಎಡಿಸಿ ಬಿ.ಟಿ.ಕುಮಾರಸ್ವಾಮಿ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ರವಾನಿಸಿದರು.
ಪ್ರಾಚಾರ್ಯರ ಸಂಘದ ಜಿಲ್ಲಾಧ್ಯಕ್ಷ ಎಲ್.ರಂಗಪ್ಪ, ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಬಿ.ಆರ್.ಮಲ್ಲೇಶಪ್ಪ, ಕಾರ್ಯಾಧ್ಯಕ್ಷ ಜಿ.ಎಸ್.ತಿಪ್ಪೇಸ್ವಾಮಿ, ಬೋಧಕೇತರ ಸಂಘದ ಜಿಲ್ಲಾಧ್ಯಕ್ಷ ಟಿ.ದುರುಗೇಶಪ್ಪ, ಪದಾಧಿಕಾರಿಗಳಾದ ಕೆ.ವಿ.ನಾಗರಾಜಪ್ಪ, ಎಂ.ರವೀಶ್, ಎ.ಕಾಂತರಾಜ್, ಪಿ.ಕಾಂತರಾಜು, ಜಿ.ಎಸ್.ತಿಪ್ಪೇಸ್ವಾಮಿ, ಎನ್.ಕೆಂಚವೀರಪ್ಪ, ಎ.ಎಚ್.ಆನಂದ, ಬಿ.ಎಚ್.ಸತೀಶ, ಬಸವಯ್ಯ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.