More

    ಸಾಮಾಜಿಕ ಪರಿವರ್ತನೆ ಹರಿಕಾರ ನಾರಾಯಣಗುರು- ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್

    ದಾವಣಗೆರೆ: ಶೋಷಣೆ ವಿರುದ್ಧ ಬಲವಾದ ಧ್ವನಿ ಎತ್ತುವ ಮೂಲಕ ಸಮಾಜದಲ್ಲಿ ಬದಲಾವಣೆ ತರುವಲ್ಲಿ ನಾರಾಯಣ ಗುರುಗಳ ಪಾತ್ರ ಬಹು ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದರು.
    ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ, ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಪುರಾತನ ಕಾಲದಿಂದ ತಳ ಸಮುದಾಯದವರು ನಿರಂತರ ಶೋಷಣೆಗೆ ಒಳಗಾಗಿದ್ದು, ಅದರ ವಿರುದ್ಧ ಧ್ವನಿ ಎತ್ತಿ ಒಂದೇ ಜಾತಿ, ಒಂದೇ ಧರ್ಮ, ಒಬ್ಬ ಮಾನವ ಎಂಬ ಘೋಷವಾಕ್ಯದೊಂದಿಗೆ ಸಮಾಜ ಪರಿವರ್ತನೆಗೆ ನಾರಾಯಣ ಗುರುಗಳು ಶ್ರಮಿಸಿದ್ದರು.
    ಮೂಢನಂಬಿಕೆ, ಜಾತೀಯತೆ, ಅಸ್ಪೃಶ್ಯತೆ, ದೇವದಾಸಿ ಪದ್ಧತಿ, ಬೆತ್ತಲೆ ಸೇವೆ, ಬಾಲ್ಯವಿವಾಹ, ಗುಲಾಮಗಿರಿ, ಜೀತ ಪದ್ಧತಿ, ಜಮೀನ್ದಾರಿ ಪದ್ಧತಿ ಮೊದಲಾದ ಅನಿಷ್ಟ ಪದ್ಧತಿಗಳಿಗೆ ವಿದಾಯ ಹೇಳಿದವರು ಅವರಾಗಿದ್ದಾರೆ ಎಂದು ಹೇಳಿದರು.
    ಗುರುಗಳ ತತ್ವಾದರ್ಶ ಚಾಚು ತಪ್ಪದೇ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಉತ್ತಮ ಹಾಗೂ ಸದೃಢ ಸಮಾಜ ನಿರ್ಮಾಣ ಸಾಧ್ಯ. ತುಳಿತಕ್ಕೊಳಗಾದ ಎಲ್ಲ ಸಮುದಾಯಗಳು ಶಿಕ್ಷಣ, ಸಂಘಟನೆ, ವ್ಯಾಪಾರ, ಕೃಷಿಯಲ್ಲಿ ತಾಂತ್ರಿಕತೆ ಹಾಗೂ ಗ್ರಾಮೀಣ ಸಂಪ್ರದಾಯ ಉಳಿಸಿ ಬೆಳೆಸುವಂತಹ ಕಾರ್ಯವಾಗಬೇಕು ಎಂದರು.
    ಹರಿಹರದ ವಿದುಷಿ ನೃತ್ಯ ಶಾಲೆಯ ವಿದ್ಯಾರ್ಥಿಗಳು ನಾರಾಯಣಗುರುಗಳ ಜೀವನ ಚರಿತ್ರೆ ಕುರಿತು ನೃತ್ಯ ಪ್ರದರ್ಶಿಸಿದರು.
    ಜಿಪಂ ಉಪ ಕಾರ್ಯದರ್ಶಿ ಕೃಷ್ಣ ನಾಯ್ಕ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ರುದ್ರಪ್ಪ, ಮಾರುತಿ ಶಾಲೆಮನೆ, ಆರ್ಯ ಈಡಿಗ ಸಮಾಜದ ಜಿಲ್ಲಾ ಅಧ್ಯಕ್ಷ ಎಚ್. ಶಂಕರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts