ಜಗಳೂರು: ಖಾಸಗಿ ಮತ್ತು ಸರ್ಕಾರಿ ಬ್ಯಾಂಕುಗಳಲ್ಲಿ ಸುಸ್ತಿದಾರ ರೈತರ ಸಾಲವನ್ನು ಬಲವಂತವಾಗಿ ವಸೂಲಿ ಮಾಡುವ ಸರ್ಕಾರದ ನಿರ್ಣಯ ಖಂಡಿಸಿ ರೈತಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು(ಹುಚ್ಚವ್ವನಹಳ್ಳಿ ಮಂಜುನಾಥ್ ಬಣ) ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಇಲ್ಲಿನ ಪ್ರವಾಸಿ ಮಂದಿರದಿಂದ ಮೆರವಣಿಗೆ ಆರಂಭಿಸಿದ ಕಾರ್ಯಕರ್ತರು ಮಹಾತ್ಮ ಗಾಂಧಿ ಹಳೇ ವೃತ್ತ, ಹೊಸ ಬಸ್ ನಿಲ್ದಾಣ, ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಮೂಲಕ ತಾಲೂಕು ಕಚೇರಿಗೆ ತೆರಳಿದರು.
ಸತತ ಬರದಿಂದ ತಾಲೂಕಿನ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಆದರೆ, ಸರ್ಕಾರ ಆನೆ ನಡೆದಿದ್ದೇ ದಾರಿ ಎನ್ನುವಂತೆ ನಿರ್ಧಾರ ಕೈಗೊಳ್ಳುತ್ತಿದೆ. ಈ ವರ್ಷ ಕೂಡ ಬ್ಯಾಂಕ್ ಸಾಲ ಕಟ್ಟಲು ಸಾಧ್ಯವಾಗದೇ ರೈತರು ಸಂಕಷ್ಟದಲ್ಲಿದ್ದಾರೆ. ಈಗ ದಿಢೀರನೆ ಸಾಲ ವಸೂಲಿಗೆ ಆದೇಶ ಹೊರಡಿಸಿರುವ ನಿರ್ಧಾರ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಬ್ಯಾಂಕ್ಗಳಲ್ಲಿ ರೈತರ ಸಾಲಮನ್ನಾ ಮಾಡಬೇಕು. ಕೃಷಿಗೆ ಪೂರಕ ಯೋಜನೆ ಜಾರಿಗೊಳಿಸಬೇಕು. ಮುಂಗಾರು ಬಿತ್ತನೆ ವೇಳೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಉಚಿತವಾಗಿ ನೀಡಬೇಕು. ಎಲ್ಲ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿ ಮಾಡಬೇಕು. ಖರೀದಿ ಕೇಂದ್ರ ತೆರೆಯಬೇಕು ಎಂದು ಆಗ್ರಹಿಸಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಗಡಿಮಾಕುಂಟೆ ಬಸವರಾಜಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಂ. ಹೊಳೆ ಚಿರಂಜೀವಿ, ಹಸಿರು ಸೇನೆ ಅಧ್ಯಕ್ಷ ಕಾನನಕಟ್ಟೆ ತಿಪ್ಪೇಸ್ವಾಮಿ, ಎಸ್ಎಫ್ಐ ಜಿಲ್ಲಾಧ್ಯಕ್ಷ ಜೆ. ಮಹಾಲಿಂಗಪ್ಪ, ಮುಖಂಡರಾದ ಹೇಮರೆಡ್ಡಿ, ರಂಗಪ್ಪ, ಶಾಂತಪ್ಪ ಇದ್ದರು.