ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕರೊನಾ ಸೋಂಕು ಪೀಡಿತನ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಮುನ್ನೆಚ್ಚರಿಕೆಯಾಗಿ ಆತನನ್ನು ವೈದ್ಯಕೀಯ ನಿಗಾದಲ್ಲಿರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.
ನಗರದಲ್ಲಿ ಗುರುವಾರ ಉದಯನಗರ, ರಾಮನಗರ ಹಾಗೂ ಹಳೇ ಹುಬ್ಬಳ್ಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸೋಂಕು ಪೀಡಿತ ರೋಗಿಗೆ ಹಲವು ದಿನಗಳ ಚಿಕಿತ್ಸೆಯ ನಂತರ ಆತನ ಕಫ ಮತ್ತು ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪರೀಕ್ಷೆಯ ವರದಿ ನೆಗೆಟಿವ್ ಬಂದಿದೆ. 2ನೇ ವರದಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಲಾಕ್ಡೌನ್ ಅನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಲಾಗುವುದು. ದೆಹಲಿಯ ನಿಜಾಮುದ್ದೀನ್ ಜಮಾತ್ನಲ್ಲಿ ಭಾಗವಹಿಸಿ ದವರನ್ನು ಕ್ವಾರಂಟೈನ್ಗೆ ಒಳಪಡಿಸಿ ಪರೀಕ್ಷೆ ನಡೆಸಲಾಗುತ್ತಿದೆ. ಕರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ಕ್ರಮಕೈಗೊಳ್ಳುತ್ತಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್, ಹುಡಾ ಅಧ್ಯಕ್ಷ ನಾಗೇಶ ಕಲ್ಬುರ್ಗಿ ಇತರರಿದ್ದರು.
ಕಿಮ್್ಸ ವೈದ್ಯರೊಂದಿಗೆ ಶೆಟ್ಟರ್ ಸಭೆ: ಹುಬ್ಬಳ್ಳಿ ನಗರದ ಕೇಶ್ವಾಪುರದ ತಮ್ಮ ನಿವಾಸದಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಕಿಮ್್ಸ ವೈದ್ಯಾಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿ, ಕೋವಿಡ್-19 ರೋಗಿಗಳ ಕುರಿತಾಗಿ ಮಾಹಿತಿ ಪಡೆದರು. ಕಿಮ್್ಸ ನಿರ್ದೇಶಕ ಡಾ. ರಾಮಲಿಂಗ ಅಂಟರತಾನಿ, ಕೋವಿಡ್-19 ನೆಗೆಟಿವ್ ಎಂದು ಬಂದವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗುತ್ತಿದೆ. ನಾಲ್ಕು ಪರೀಕ್ಷಾ ವರದಿಗಳು ಬರುವುದು ಬಾಕಿ ಇದೆ. ಪಾಸಿಟಿವ್ ಬಂದ ವ್ಯಕ್ತಿಯ ಆರೋಗ್ಯ ಉತ್ತಮವಾಗಿದೆ. ಈ ವ್ಯಕ್ತಿಯ ಇತ್ತೀಚಿನ ಒಂದು ಪರೀಕ್ಷಾ ವರದಿಯಲ್ಲಿ ಕೋವಿಡ್-19 ನೆಗೆಟಿವ್ ಎಂದು ಬಂದಿದೆ. ಎರಡನೇ ವರದಿಯಲ್ಲೂ ನೆಗೆಟಿವ್ ಬಂದರೆ ರೋಗಿಯನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗುವುದು. ಆಸ್ಪತ್ರೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ವೈದ್ಯರು, ಶುಶ್ರೂಷಕರು ಹಾಗೂ ಇತರೆ ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದು ಸಚಿವರಿಗೆ ಮಾಹಿತಿ ನೀಡಿದರು. ಪ್ರಭಾರ ವೈದ್ಯಕೀಯ ಅಧೀಕ್ಷಕ ಡಾ. ಅರುಣಕುಮರ ಚವ್ಹಾಣ, ಡಿಎಂಎಸ್ ಡಾ. ಎಸ್.ವೈ. ಮುಲ್ಕಿ ಪಾಟೀಲ್ ಇದ್ದರು.
ಮೂಲ ಸೌಲಭ್ಯ ಒದಗಿಸಲು ಸೂಚನೆ: ನಗರದ ಚನ್ನಮ್ಮ ವೃತ್ತದಲ್ಲಿ ಕರ್ತವ್ಯ ನಿರತ ಪೊಲೀಸರನ್ನು ಮಾತನಾಡಿಸಿದ ಸಚಿವರು, ಇಲಾಖೆಯಿಂದ ಮಾಸ್ಕ್, ಹ್ಯಾಂಡ್ ಸ್ಯಾನಿಟೈಸರ್, ಆಹಾರದ ಪೊಟ್ಟಣ ಸೇರಿದಂತೆ ಮೂಲ ಸೌಲಭ್ಯಗಳನ್ನು ಒದಗಿಸಿರುವ ಬಗ್ಗೆ ಮಾಹಿತಿ ಪಡೆದರು. ಪೊಲೀಸರು, ವೈದ್ಯರು, ಪೌರ ಕಾರ್ವಿುಕರು ಲಾಕ್ಡೌನ್ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಮೂಲ ಸೌಲಭ್ಯ ಒದಗಿಸುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿರುವುದಾಗಿ ಹೇಳಿದರು.