ಬೆಳಗಾವಿ: ಸ್ಮಶಾನಭೂಮಿ ಖರೀದಿಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾವನೆ ಬಾಕಿ ಉಳಿಸದೆ ತ್ವರಿತವಾಗಿ ಮಂಜೂರು ಮಾಡುವ ಜತೆಗೆ ಭೂಮಿ ಖರೀದಿಸಿ
ಹಣ ಪಾವತಿ ಬಾಕಿ ಉಳಿದಿದ್ದರೆ ತಕ್ಷಣ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎಸ್ಸಿಪಿ, ಟಿಎಸ್ಪಿ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ವರೆಗೆ ಜಿಲ್ಲೆಯಲ್ಲಿ ಯಾವುದೇ ಸ್ಮಶಾನ ಭೂಮಿಗೆ ಅನುದಾನ ಬಿಡುಗಡೆ ಬಾಕಿ ಇರುವುದಿಲ್ಲ. ಸರ್ಕಾರದ ಮಾರ್ಗಸೂಚಿ ಪ್ರಕಾರ ಈಗಾಗಲೇ ಎಲ್ಲಾ ಸ್ಮಶಾನ ಭೂಮಿ ಮಂಜೂರಾತಿಗೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.
ಚಿಕ್ಕೋಡಿ ತಾಲೂಕಿನ ಬೋರಗಾಂವ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂಬೇಡ್ಕರ ಉದ್ಯಾನವನ ನಿರ್ಮಾಣದ ಕಾಮಗಾರಿ ಕೂಡಲೇ ಪ್ರಾರಂಭಿಸಲು ಸೂಚನೆ ನೀಡಲಾಗುವುದು. ಜಾತಿನಿಂದನೆ ಪ್ರಕರಣಗಳ ತನಿಖೆ ನಡೆಸಲು ಕ್ರಮ ವಹಿಸಲಾಗುವುದು ಎಂದರು.
ಸಮಿತಿ ನಾಮ ನಿರ್ದೇಶಿತ ಸದಸ್ಯರಾದ ಅಶೋಕ ಅಸೋಗಿ, ಸುರೇಶ ತಳವಾರ, ಜಿಪಂ ಸಿಇಒ ದರ್ಶನ್ ಎಚ್.ವಿ., ಎಸ್ಪಿ ಡಾ.ಸಂಜೀವ ಪಾಟೀಲ, ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹಾನಿಂಗ ನಂದಗಾವಿ, ಡಿಸಿಪಿ ರವೀಂದ್ರ ಗಡಾದಿ, ಉಪ ವಿಭಾಗಾಧಿಕಾರಿ ಬಲರಾಮ ಚವ್ಹಾಣ, ಶಶಿಧರ ಬಗಲಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಡಾ.ಉಮಾ ಸಾಲಿಗೌಡರ ಇತರರಿದ್ದರು.