ಬೆಂಗಳೂರು: ಮೈಸೂರಿನಲ್ಲಿ ಕಳೆದ ವರ್ಷ ಜರುಗಿದ ರಾಜ್ಯ ವಕೀಲರ ಸಮ್ಮೇಳನದ ವೇಳೆ ಹಣಕಾಸು ದುರ್ಬಳಕೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ.
ಈ ದೂರಿನ ತನಿಖೆಗೆ ಮೂವರು ಸದಸ್ಯರ ಸಮಿತಿ ರಚಿಸಿ ಭಾರತೀಯ ವಕೀಲರ ಪರಿಷತ್ (ಬಿಸಿಐ) ಮಾಡಿರುವ ಆದೇಶಕ್ಕೆ ನೀಡಿರುವ ತಡೆಯಾಜ್ಞೆಯನ್ನು ಮುಂದುವರಿಸಿರುವ ಹೈಕೋರ್ಟ್, ಈ ತನಿಖೆಯನ್ನು ಯಾರು ನಡೆಸಬೇಕು ಎಂಬುದನ್ನು ನಿರ್ಧರಿಸಲು ಪ್ರಕರಣವನ್ನು ಮೇ 30ಕ್ಕೆ ಪಟ್ಟಿ ಮಾಡುವಂತೆ ಆದೇಶಿಸಿದೆ.
ರಾಜ್ಯ ವಕೀಲರ ಪರಿಷತ್ ಸದಸ್ಯ ಹಿರಿಯ ವಕೀಲ ಎಸ್. ಬಸವರಾಜು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ವಿಚಾರಣೆ ನಡೆಸಿತು. ಕೆಎಸ್ಬಿಸಿ ಅಧ್ಯಕ್ಷ ವಿಶಾಲ್ ರಘು ಮತ್ತು ವಿನಯ್ ಮಂಗಳೇಕರ್ ಅವರಿಗೆ ಕೈಯಾರೆ ನೋಟಿಸ್ ತಲುಪಿಸಲು ಅರ್ಜಿದಾರರಿಗೆ ಆದೇಶಿಸಿದೆ.
ಕೆಎಸ್ಬಿಸಿ ಮಾಜಿ ಅಧ್ಯಕ್ಷ ಆನಂದ್ ಕುಮಾರ್ ಮಗ್ದಮ್ ಇದೇ ತಿಂಗಳು 5ರಂದು ನೀಡಿದ್ದ ದೂರನ್ನು ಆಧರಿಸಿ ಬಿಸಿಐ 12ರಂದು ಹಿರಿಯ ವಕೀಲ ಅಪೂರ್ವಕುಮಾರ್ ಶರ್ಮಾ ನೇತೃತ್ವದಲ್ಲಿ ಮೂವರ ಸಮಿತಿ ರಚಿಸಿ, ತನಿಖೆಗೆ ಆದೇಶಿಸಿತ್ತು. ಅಮಿತ್ ವೇದ್ ಮತ್ತು ಭಕ್ತಭೂಷಣ್ ಬರೀಕ್ ಸಮಿತಿಯ ಮತ್ತಿಬ್ಬರು ಸದಸ್ಯರಾಗಿದ್ದಾರೆ.
ಮೈಸೂರಿನಲ್ಲಿ ನಡೆದ ವಕೀಲರ ಸಮಾವೇಶಕ್ಕೆ ಸಂಬಂಧಿಸಿದ ಖರ್ಚು-ವೆಚ್ಚದ ದಾಖಲೆಗಳನ್ನು ಸಲ್ಲಿಸುವಂತೆ ಕೆಎಸ್ಬಿಸಿ ಕಾರ್ಯದರ್ಶಿಗೆ ಬಿಸಿಐ ಸೂಚಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್ಬಿಸಿ ಸದಸ್ಯರು ಮತ್ತು ವಕೀಲರು ಹೇಳಿಕೆ ನೀಡದಂತೆ ನಿರ್ಬಂಧಿಸಿತ್ತು. ಇದಕ್ಕೆ ಹೈಕೋರ್ಟ್ ತಡೆ ನೀಡಿದೆ.