More

    ಹೆಚ್ಚಲಿದೆ ಕರೊನಾ ತಪಾಸಣೆ

    ಧಾರವಾಡ: ಕರೊನಾ ತಪಾಸಣೆಯನ್ನು ವ್ಯಾಪಕವಾಗಿ ಹೆಚ್ಚಿಸಿ, ಜೀವಗಳನ್ನು ರಕ್ಷಿಸಲು ಸರ್ಕಾರ, ಜಿಲ್ಲಾಡಳಿತ ನಿರಂತರವಾಗಿ ಶ್ರಮಿಸುತ್ತಿದೆ. ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ತಂಡವಾಗಿ ಈ ಹೋರಾಟ ಮುಂದುವರಿಸಬೇಕು. ನಗರ ಮತ್ತು ಗ್ರಾಮೀಣ ಭಾಗಗಳ ಜನರನ್ನು ಸ್ವ್ಯಾಬ್ ಸಂಗ್ರಹಣೆ ಕೇಂದ್ರಗಳಿಗೆ ಕರೆತರಲು ಅಗತ್ಯ ವಾಹನಗಳನ್ನು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.

    ತಮ್ಮ ಕಚೇರಿ ಸಭಾಂಗಣದಲ್ಲಿ ಶನಿವಾರ ಸಂಜೆ ಕರೆದಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಆರೋಗ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ, ಪೌರಾಡಳಿತ, ಪ್ರಾದೇಶಿಕ ಸಾರಿಗೆ ಇಲಾಖೆ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಈ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಬೇಕು. ಇತ್ತೀಚೆಗೆ ವೈದ್ಯಾಧಿಕಾರಿಗಳು ತಮ್ಮ ಹೋರಾಟವನ್ನು ನ್ಯಾಯಿಕ ಮಾರ್ಗದಲ್ಲಿ ನಡೆಸಿ ಕರ್ತವ್ಯ ನಿರ್ವಹಣೆಯ ಜೊತೆಗೆ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದಿರುವುದು ಮಾದರಿಯಾಗಿದೆ. ಆದರೆ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಕರೊನಾ ವ್ಯಾಪಕವಾಗಿರುವ ಈ ಕಠಿಣ ಸಂದರ್ಭದಲ್ಲಿ ಮುಷ್ಕರ ನಿರತರಾಗಿರುವುದನ್ನು ಒಪ್ಪಲು ಸಾಧ್ಯವಾಗದು. ಸೋಮವಾರದವರೆಗೆ ಅವರು ಕರ್ತವ್ಯಕ್ಕೆ ಮರಳಲು ಸೂಚನೆ ನೀಡಿ ಕಾಲಾವಕಾಶ ಕಲ್ಪಿಸಿ. ಆಗಲೂ ಹಾಜರಾಗದಿದ್ದರೆ ನಿಯಮಾನುಸಾರ ಬೇರೆಯವರನ್ನು ನೇಮಿಸಿಕೊಂಡು ಅಗತ್ಯ ಕಾರ್ಯಗಳಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು ಸೂಚಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಆರೋಗ್ಯ ಇಲಾಖೆಯಲ್ಲಿ ಮಂಜೂರಾಗಿರುವ ಹುದ್ದೆಗಳು ಖಾಲಿ ಇದ್ದರೆ ತಾತ್ಕಾಲಿಕವಾಗಿ 6 ತಿಂಗಳ ಅವಧಿಗೆ ತಕ್ಷಣ ನೇಮಕಾತಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದರು. ಪೊಲೀಸ್ ಆಯುಕ್ತ ಆರ್. ದಿಲೀಪ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ, ಉಪ ವಿಭಾಗಾಧಿಕಾರಿ ಡಾ. ಗೋಪಾಲಕೃಷ್ಣ, ಡಾ. ಯಶವಂತ ಮದೀನಕರ್, ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಕುಮಾರ್ ಮಾನಕರ, ಇತರರು ಉಪಸ್ಥಿತರಿದ್ದರು.

    ಸಮನ್ವಯದಿಂದ ನಿರ್ವಹಿಸಿ
    ಜಿಲ್ಲೆಯ ಎಲ್ಲ ತಹಸೀಲ್ದಾರ್ ಕಚೇರಿಗಳು, ಪಾಲಿಕೆ, ಇತರ ನಗರ ಸ್ಥಳೀಯ ಸಂಸ್ಥೆಗಳು, ಮಾರುಕಟ್ಟೆ, ರೈಲು, ಬಸ್ ನಿಲ್ದಾಣಗಳಿಗೆ ಆಗಮಿಸುವ ಸಾರ್ವಜನಿಕರು, ಆಟೋ ರಿಕ್ಷಾ ಚಾಲಕರು, ಅಪಾರ್ಟ್ ಮೆಂಟ್ ಅಸೋಸಿಯೇಷನ್ ಸದಸ್ಯರು ಹಾಗೂ ಆಸ್ಪತ್ರೆಗಳಿಗೆ ಬರುವ ರೋಗಿಗಳು, ಅವರೊಂದಿಗೆ ಬರುವವರನ್ನು ಕೋವಿಡ್ ತಪಾಸಣೆಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಜಿ.ಪಂ. ಸಿಇಒ ಡಾ. ಬಿ.ಸಿ. ಸತೀಶ ಮಾತನಾಡಿ, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮಾಸ್ಕ್ ಧರಿಸದವರಿಗೆ ದಂಡ ಹಾಕುವ ಸಂದರ್ಭದಲ್ಲಿ ಅವರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲು ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

    21 ಸಾವಿರ ರೂ. ದಂಡ ವಸೂಲಿ
    ಅವಳಿ ನಗರದಲ್ಲಿ ಶುಕ್ರವಾರ ವಿವಿಧೆಡೆ ಕಾರ್ಯಾಚರಣೆ ನಡೆಸಿದ ಪಾಲಿಕೆ ಸಿಬ್ಬಂದಿ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದ 105 ಜನರಿಂದ 21 ಸಾವಿರ ರೂ. ದಂಡ ವಸೂಲಿ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts