ಹನೂರು: ತಾಲೂಕಿನ ಅಜ್ಜೀಪುರ- ಕಾಂಚಳ್ಳಿ ಮಾರ್ಗದ 2 ಕಿಮೀ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಆರ್. ನರೇಂದ್ರ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.
ಅಜ್ಜೀಪುರ ಮಾರ್ಗವಾಗಿ ಸಂಪರ್ಕ ಕಲ್ಪಿಸುವ ರಸ್ತೆಯನ್ನು 10 ವರ್ಷದ ಹಿಂದೆ ಡಾಂಬರೀಕರಣಗೊಳಿಸಲಾಗಿತ್ತು. ಮೂರ್ನಾಲ್ಕು ವರ್ಷಗಳಿಂದ ಅಲ್ಲಲ್ಲಿ ಗುಂಡಿಗಳು ನಿರ್ಮಾಣವಾಗಿ ತುಂಬಾ ಹಾಳಾಗಿತ್ತು. ಇದರಿಂದ ಸಾರ್ವಜನಿಕ ಸಂಚರಿಸಲು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದು, ರಸ್ತೆ ಡಾಂಬರೀಕರಣ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು. ರಾಜ್ಯ ರಸ್ತೆ ಅಭಿವೃದ್ಧಿ ಯೋಜನೆಯಡಿ 1.3 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಗುಣಮಟ್ಟ ಕಾಯ್ದುಕೊಳ್ಳುವ ಮೂಲಕ ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು. ಈ ಬಗ್ಗೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕು ಎಂದು ಅವರು ಸೂಚಿಸಿದರು.
ಗ್ರಾಮಸ್ಥರು ಮಾತನಾಡಿ, ಅಜ್ಜೀಪುರ ಗ್ರಾಮದ ರಸ್ತೆ ಬದಿಯಲ್ಲಿ ಚರಂಡಿ ಇಲ್ಲ. ಇದರಿಂದ ಕೊಳಚೆ ನೀರು ರಸ್ತೆ ಬದಿಯಲ್ಲಿ ಹರಿಯುತ್ತದೆ. ಇದರಿಂದ ತುಂಬಾ ಸಮಸ್ಯೆಯಾಗಿದೆ. ಈ ಬಗ್ಗೆ ಕ್ರಮವಹಿಸುವಂತೆ ಶಾಸಕರಲ್ಲಿ ಮನವಿ ಮಾಡಿದರು. ಚರಂಡಿ ನಿರ್ಮಿಸುವಂತೆ ಗುತ್ತಿಗೆದಾರ ಅಪ್ಪದೊರೆ ಅವರಿಗೆ ಶಾಸಕ ಸೂಚಿಸಿದರು.
ಮಲೆಮಹದೇಶ್ವರ ಬೆಟ್ಟದ ಮೂಲಕ ಅಧಿಕ ಭಾರದ ವಾಹನಗಳು ತಮಿಳುನಾಡಿಗೆ ಸಂಚರಿಸುತ್ತಿವೆ. ಇದರಿಂದ ತಾಳುಬೆಟ್ಟದಿಂದ ಮ.ಬೆಟ್ಟದವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ. ಈ ಮಾರ್ಗದಲ್ಲಿ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರಲ್ಲಿ ಮನವಿ ಮಾಡಲಾಗಿದೆ ಎಂದರು.
ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆಯಿಂದ 9 ಮನೆಗಳು ಹಾನಿಗೊಳಗಾಗಿವೆ. ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಆಲೂಗಡ್ಡೆ, ಬೆಳ್ಳುಳ್ಳಿ ಫಸಲು ಹಾಳಾಗಿದ್ದು, ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಬಸವನಗುಡಿ ಸಮೀಪದ ಕಿರು ಸೇತುವೆಯನ್ನು ಮೇಲ್ದರ್ಜೆಗೇರಿಸುವಂತೆ ಕೋಡಲಾಗಿದೆ ಎಂದು ತಿಳಿಸಿದರು.
ಜಿಪಂ ಮಾಜಿ ಸದಸ್ಯ ಬಸವರಾಜು, ಗ್ರಾಪಂ ಅಧ್ಯಕ್ಷೆ ಸುಧಾ, ಮುಖಂಡರಾದ ಮಹದೇವು, ರಾಜು, ನಾಗರಾಜು ಇನ್ನಿತರರು ಇದ್ದರು.ಫೋಟೊ 1
ಅಜ್ಜೀಪುರ- ಕಾಂಚಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್. ನರೇಂದ್ರ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು. ಬಸವರಾಜು, ಸುಧಾ, ನಾಗರಾಜು ಇನ್ನಿತರರು ಇದ್ದರು.