ಎನ್.ಆರ್.ಪುರ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ಗೆ 10 ಸಾವಿರ ಹೊಸ ಸದಸ್ಯರನ್ನು ಸೇರ್ಪಡೆಗೊಳಿಸುವ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.
ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಶನಿವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ನಿಂದ ಏರ್ಪಡಿಸಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ರಾಜ್ಯದಲ್ಲಿ 3.60 ಲಕ್ಷ ಕಸಾಪ ಸದಸ್ಯರಿದ್ದಾರೆ. ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಅಭಿವೃದ್ಧಿಯಿಂದ ಸಂಸ್ಕಾರ ಬೆಳೆಯುತ್ತದೆ. ಈ ಕಾರಣಕ್ಕೆ ಅಧ್ಯಕ್ಷರು 1 ಕೋಟಿ ಸದಸ್ಯರನ್ನು ಮಾಡಬೇಕು ಎಂಬ ಅಭಿಲಾಷೆ ಹೊಂದಿದ್ದಾರೆ. ಆ್ಲೈನ್ ಸದಸ್ಯತ್ವ ಅಭಿಯಾನ ಸಹ ಮಾಡಲಾಗುವುದು ಎಂದರು.
ಮಲೆನಾಡ ಹಬ್ಬಗಳು ಮತ್ತು ಭಾವೈಕ್ಯತೆ ಕುರಿತು ಮಾತನಾಡಿದ ಕಸಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ವೆಂಕಟೇಶ್, ಮಲೆನಾಡಿನ ಹಬ್ಬಗಳು ಜಾನಪದ ಸಾಹಿತ್ಯದೊಂದಿಗೆ ಬೆಸೆದುಕೊಂಡಿದೆ. ಇಲ್ಲಿನ ಹಬ್ಬಗಳಲ್ಲಿ ಕಲಾತ್ಮಕ ಕಲೆಗಳಿವೆ. ನೃತ್ಯ ರೂಪಕಗಳಿವೆ ಎಂದು ಹೇಳಿದರು.
ತಾಲೂಕು ಘಟಕದ ಅಧ್ಯಕ್ಷ ಎನ್.ಎಂ.ಕಾಂತರಾಜ್ ಮಾತನಾಡಿ, ವೈಯಕ್ತಿಕ ಕಾರಣಗಳಿಂದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಮುಂದಿನ ಅಧ್ಯಕ್ಷರಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು.
ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಕೆ.ಉಮೇಶ್, ತಾಲೂಕು ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯಾ ನಂಜುಂಡಸ್ವಾಮಿ, ಕಾರ್ಯದರ್ಶಿ ಸುಭಾಷ್, ನಗರ ಘಟಕದ ಅಧ್ಯಕ್ಷೆ ಜುಬೇದಾ, ದತ್ತಿದಾನಿ ಪಿ.ಸಿ.ಮ್ಯಾಥ್ಯೂ, ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಪೂರ್ಣೇಶ್, ಜ್ವಾಲಾಮಾಲಿನಿ ಜೇಸಿ ಸಂಸ್ಥೆ ಅಧ್ಯಕ್ಷ ಗಂಗಾಧರ್, ಯುವ ಮುಖಂಡ ದೇವಂತ್ರಾಜ್ ಗೌಡ, ಓಂಕಾರಪ್ಪ ಇದ್ದರು.