ಗುವಾಹಟಿ: ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 14 ಮಂದಿ ಮೃತಪಟ್ಟಿರುವ ಘಟನೆ ಅಸ್ಸಾಂನ ದೇರ್ಗಾಂವ್ನಲ್ಲಿ ನಡೆದಿದೆ. ಘಟನೆಯಲ್ಲಿ 27 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಬೆಳಗ್ಗೆ ಐದು ಘಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಬಸ್ ತಿನ್ಸುಕಿಯಾದ ತಿಲಿಂಗ ಮಂದಿರಕ್ಕೆ ತೆರಳುತ್ತಿದ್ದಾಗ ದೇರ್ಗಾಂವ್ ಬಳಿ ಅಪಘಾತವಾಗಿದೆ. ಬೆಳಗ್ಗೆ 5 ಘಂಟೆ ಸುಮಾರಿಗೆ ಮಾರ್ಗರಿಟಾದಿಂದ ಬರುತ್ತಿದ್ದ ಕಲ್ಲಿದ್ದಲು ತುಂಬಿದ ಲಾರಿಯೊಂದು 45 ಪ್ರಯಾಣಿಕರಿದ್ದ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದುರ್ಘಟನೆ ಸಂಭವಿಸಿದೆ.
ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಜೋರ್ಹತ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದ್ದು, ಈ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ. 14 ಮಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.