ದಾವಣಗೆರೆ: ಗುತ್ತಿಗೆದಾರರೊಬ್ಬರಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ದಾವಣಗೆರೆ ಮಹಾನಗರ ಪಾಲಿಕೆ ವ್ಯವಸ್ಥಾಪಕ ವೆಂಕಟೇಶ್ ಭಾನುವಾರ ಸಿಕ್ಕಿಬಿದ್ದಿದ್ದರು. ಇದರ ಬೆನ್ನಲ್ಲೇ ಆಡಿಯೋವೊಂದು ವೈರಲ್ ಆಗಿದ್ದು, ಜಿಲ್ಲಾ ಉಸ್ತವಾರಿ ಸಚಿವರಿಗೂ ಲಂಚದ ಹಣ ಸಂದಾಯವಾಗಿದೆ ಎಂಬ ಮಾತು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಬೀದಿಬದಿ ವ್ಯಾಪಾರಿಗಳಿಂದ ಸುಂಕ ಸಂಗ್ರಹದ ಗುತ್ತಿಗೆ ಅವಧಿ ವಿಸ್ತರಣೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದ ಗುತ್ತಿಗೆದಾರನೊಬ್ಬನಿಂದ 3 ಲಕ್ಷ ರೂ. ಲಂಚ ಸ್ವೀಕರಿಸುವಾಗ ಮಹಾನಗರ ಪಾಲಿಕೆ ವ್ಯವಸ್ಥಾಪಕ ವೆಂಕಟೇಶ್ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದರು. ನ.21ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದಾರೆ. ಘಟನೆಗೂ ಪೂರ್ವದಲ್ಲಿ ಆರೋಪಿ ವೆಂಕಟೇಶ್, ಗುತ್ತಿಗೆದಾರ ಎಂ.ಕೃಷ್ಣ ಅವರೊಂದಿಗೆ ನಡೆಸಿದ್ದರು ಎನ್ನಲಾದ ಮಾತುಕತೆಯ ಆಡಿಯೋ ವೈರಲ್ ಆಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಅವರಿಗೆ 15 ಲಕ್ಷ ರೂ. ಲಂಚ ನೀಡಿರುವುದಾಗಿ ಪಾಲಿಕೆ ಆಯುಕ್ತರು ಹೇಳಿದ್ದಾರೆ ಎಂದು ಗುತ್ತಿಗೆದಾರರ ಬಳಿ ವೆಂಕಟೇಶ್ ಹೇಳಿಕೊಂಡಿದ್ದಾರೆ ಎಂಬ ಮಾತು ಚರ್ಚೆಗೀಡಾಗಿದೆ.
ಆಡಿಯೋ ಆಧಾರದ ಮೇಲೆ ತನಿಖೆಗೆ ಒತ್ತಾಯಿಸಿ ಲೋಕಾಯುಕ್ತರಿಗೆ ದೂರು ನೀಡಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಮಣಿ ಸರ್ಕಾರ್ ತಿಳಿಸಿದ್ದರು. ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಆಯುಕ್ತರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.
ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಸಚಿವರು, ಮೇಯರ್, ಆಯುಕ್ತರು ಎಲ್ಲರೂ ರಾಜೀನಾಮೆ ನೀಡಬೇಕು. ಈ ವಿಚಾರವಾಗಿ ಲೋಕಾಯುಕ್ತರಿಗೂ ದೂರು ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಬುಧವಾರ ಪಾಲಿಕೆ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಈ ಪ್ರಕರಣ ವ್ಯವಸ್ಥಿತ ಪಿತೂರಿಯಾಗಿದೆ. ಆರ್ಥಿಕವಾಗಿ ಅನುಕೂಲಸ್ಥರಾದ ಜಿಲ್ಲಾ ಸಚಿವ ಬೈರತಿ ಬಸವರಾಜ ಅವರ ಹೆಸರನ್ನು ಈ ಪ್ರಕರಣದಲ್ಲಿ ತಳುಕು ಹಾಕಿರುವುದರ ಹಿಂದೆ ಕಾಂಗ್ರೆಸ್ನ ಕೈವಾಡ ಇದೆ. ದಾವಣಗೆರೆ ನಗರಕ್ಕೆ ಬರಲಿರುವ ಮುಖ್ಯಮಂತ್ರಿ ಹಾಗೂ ರಾಜ್ಯ ಮುಖಂಡರಿಗೆ ಮುಜುಗರ ತರಲೆಂದು ಈ ಕೃತ್ಯ ಸೃಷ್ಟಿಸಲಾಗಿದೆ. ಯಾವುದೇ ಹಂತದ ತನಿಖೆಗೂ ನಾವು ಸಿದ್ಧರಿದ್ದೇವೆ ಎಂದು ಬಿಜೆಪಿ ಮುಖಂಡರೂ ಸುದ್ದಿಗೋಷ್ಠಿಯಲ್ಲಿ ತಿರುಗೇಟು ಕೊಟ್ಟಿದ್ದಾರೆ.
ಸತೀಶ್ ಜಾರಕಿಹೊಳಿ ವಿರುದ್ಧ ಕೆರಳಿದ ಕೇಸರಿ ಪಡೆ: ‘ನಾನು ಸ್ವಾಭಿಮಾನಿ ಹಿಂದು’ ಅಭಿಯಾನ ಶುರು
ಬುದ್ಧಿಮಾಂದ್ಯ ಎಂಬ ಕಾರಣಕ್ಕೆ ತನ್ನ ಮಗುವನ್ನೇ ಕೊಂದ ವೈದ್ಯೆ ಪ್ರಕರಣ: ಚಾರ್ಜ್ಶೀಟ್ನಲ್ಲಿದೆ ತಾಯಿಯ ಅಸಲಿ ಮುಖವಾಡ