ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರಗಳ ಮತ ಎಣಿಕೆಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಮತ ಎಣಿಕೆಗಾಗಿ 1500 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಬೆಂಗಳೂರು ನಗರ ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
ಬಿಬಿಎಂಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ್ ಪ್ರಸಾದ್ ಮೌಂಟ್ ಕಾರ್ಮಲ್, ಎಸ್ಎಸ್ಎಂಆರ್ವಿ ಮತ್ತು ಸೇಂಟ್ ಜೋಸೆಫ್ ಕಾಲೇಜುಗಳಲ್ಲಿ ಮತ ಎಣಿಕೆ ನಡೆಯಲಿದೆ. ಮತ ಎಣಿಕೆ ಕೇಂದ್ರದ 100 ಮೀ. ಒಳಗೆ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಹಾಗೂ ಮತ ಎಣಿಕೆ ಕೇಂದ್ರದೊಳಗೂ ಮೊಬೈಲ್ ಬಳಕೆ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಒಂದೊಂದು ವಿಧಾನಸಭೆ ಕ್ಷೇತ್ರಕ್ಕೆ 14 ಟೇಬಲ್ಗಳನ್ನು ಹಾಕಲಾಗಿದೆ. ಮಹದೇವಪುರ, ಬೊಮ್ಮನಹಳ್ಳಿ, ಬ್ಯಾಟರಾಯನಪುರ, ಕೆ.ಆರ್.ಪುರ ಮತ್ತು ಯಶವಂತಪುರ ವಿಧಾನಸಭೆ ಕ್ಷೇತ್ರಗಳಿಗೆ ಹೆಚ್ಚಿನ ಟೇಬಲ್ ಹಾಕಲಾಗಿದೆ. ಅಭ್ಯರ್ಥಿಗಳ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂಗಳನ್ನು ಬೆಳಗ್ಗೆ 7 ಗಂಟೆಗೆ ತೆರೆಯಲಾಗುವುದು. ಕೌಂಟಿಂಗ್ ಹಾಲ್ನೊಳಗೆ ಕಡ್ಡಾಯವಾಗಿ ಐಡಿ ಕಾರ್ಡ್ಗಳನ್ನು ಧರಿಸಬೇಕು. ಮತ ಎಣಿಕೆ ಪ್ರಕ್ರಿಯೆಯನ್ನು ವಿಡಿಯೋ ಮಾಡಲಾಗುವುದು. ವಿಡಿಯೋದ ಸಿಡಿಯನ್ನು ಪ್ರತಿ ಅಭ್ಯರ್ಥಿಗೂ ನೀಡಲಾಗುವುದು ಎಂದು ಮಂಜುನಾಥ್ ಪ್ರಸಾದ್ ತಿಳಿಸಿದರು.
ಮೇ 23 ರಂದು ಬೆಳಗ್ಗೆ 6 ರಿಂದ ಮಧ್ಯರಾತ್ರಿ 12ರವರೆಗೆ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಮತ್ತು ಸೆಕ್ಷನ್ 144 ಜಾರಿಗೊಳಿಸಲಾಗುವುದು. ಮಂಡ್ಯ ಮತ್ತು ಹಾಸನಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗುವುದು. ಮಂಡ್ಯ ಜಿಲ್ಲೆಗೆ ನಾಲ್ವರು ಡಿವೈಎಸ್ಪಿಗಳು ಹಾಗೂ 10 ಇನ್ಸ್ಪೆಕ್ಟರ್ಗಳನ್ನು ನಿಯೋಜಿಸಲಾಗುವುದು. ಹಾಸನ ಜಿಲ್ಲೆಗೆ ನಾಲ್ವರು ಡಿವೈಎಸ್ಪಿಗಳು, 6 ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ನಿಯೋಜಿಸಲಾಗುವುದು ಮತ್ತು ಸಿಐಡಿ ಘಟಕದಿಂದ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಮಂಡ್ಯ ಮತ್ತು ಹಾಸನಕ್ಕೆ ನಿಯೋಜಿಸಲಾಗಿರುವ ಸಿಬ್ಬಂದಿಗೆ ಜಿಲ್ಲಾ ಕೇಂದ್ರದಲ್ಲಿ ಮೇ 22 ತಂದು ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ತಿಳಿಸಿದರು.