ರಾಂಚಿ: ಸ್ಥಳೀಯ ಫುಟ್ಬಾಲ್ ಪಂದ್ಯದ ವೇಳೆ ಮೈದಾನಕ್ಕೆ ಸಿಡಿಲು ಬಡಿದ ಪರಿಣಾಮ ಇಬ್ಬರು ಪ್ರೇಕ್ಷಕರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾರ್ಖಂಡ್ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಶಿವಲಾಲ್ ಸೊರೇನ್ (32), ಸಂತಲಾಲ್ ಹೆಂಬ್ರಾಮ್ (20) ಮೃತ ದುರ್ದೈವಿಗಳೆಂದು ತಿಳಿದು ಬಂದಿದೆ. ಗಾಯಗೊಂಡಿರುವವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಮಣಿಪುರ ಹಿಂಸಾಚಾರ; ಇಬ್ಬರು ವಿದ್ಯಾರ್ಥಿಗಳ ಹತ್ಯೆ, ಇನ್ನೂ ಪತ್ತೆಯಾಗದ ಮೃತದೇಹ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ಸಂಜೆ ಫುಟ್ಬಾಲ್ ಪಂದ್ಯ ನಡೆಯುತ್ತಿದ್ದ ವೇಳೆ ಮಳೆ ಸುರಿದ ಪರಿಣಾಮ ಮೈದಾನದಲ್ಲಿದ್ದ ಪ್ರೇಕ್ಷಕರು ಆಶ್ರಯ ಪಡೆಯಲೆಂದು ಪಕ್ಕದ ಶೆಡ್ ಒಂದಕ್ಕೆ ತೆರಳಿದ್ದಾರೆ. ಈ ವೇಳೆ ಸಿಡಿಲು ಬಡಿದಿದ್ದು, ಅದರ ಪರಿಣಾಮವಾಗಿ ಇಬ್ಬರು ಪ್ರೇಕ್ಷಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೂವರು ಪ್ರೇಕ್ಷಕರು ಗಂಭೀರವಾಗಿ ಗಾಯಗೊಂಡಿದ್ದು, ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸರೈಯಾಹತ್ ಆಸ್ಪತ್ರೆಗೆ ದಾಖಲಿಸಿಲಾಗಿದ್ದು, ವೈದ್ಯರು ನಿಗಾ ವಹಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.