ಬೆಂಗಳೂರು: ರಾಜಧಾನಿಯಲ್ಲಿ ನಿಯಮದಂತೆ ಕಾರ್ಯನಿರ್ವಹಿಸದ ಎರಡು ಸ್ಕಾೃನಿಂಗ್ ಕೇಂದ್ರಗಳಿಗೆ ನಗರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಬಂದ್ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರು ನಗರ ವ್ಯಾಪ್ತಿಯ ವಿವಿಧ ಸ್ಕ್ಯಾನಿಂಗ್ ಕೇಂದ್ರಗಳು ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಶುಕ್ರವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಮ್ಮ ತಂಡದೊಂದಿಗೆ ಭೇಟಿ ನೀಡಿ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯ್ದೆ ಅಡಿಯಲ್ಲಿ ದಾಖಲಾತಿಗಳನ್ನು ಸಮರ್ಪಕವಾಗಿ ನಿರ್ವಹಿಸದಿರುವುದನ್ನು ದೃಢಪಡಿಸಿಕೊಳ್ಳಲಾಯಿತು. ಈ ಕಾರಣದಿಂದಾಗಿ ಕಗ್ಗದಾಸಪುರದ ಎಸ್.ಎಸ್. ಲ್ಯಾಬ್ ಆ್ಯಂಡ್ ಡಯಾಗ್ನೋಸ್ಟಿಕ್ ಮತ್ತು ಮೆಡಿ ಝೋನ್ ಡಯಾಗ್ನೋಸ್ಟಿಕ್ ಕೇಂದ್ರಗಳ ಮೇಲೆ ದಾಳಿ ನಡೆಸಿ ಬೀಗಮುದ್ರೆ ಹಾಕಿ ಮುಚ್ಚಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರವೀಂದ್ರನಾಥ್ ಎಂ ಮೇಟಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ನದೀಮ್ ಅಹಮದ್, ಬೆಂಗಳೂರು ಪೂರ್ವ ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ. ಕೋಮಲ ಎಚ್.ಟಿ., ಡಾ. ಲೀಲಾ ಆರ್.ಪಿ. ರೇಡಿಯೋಲಾಜಿಸ್ಟ್ ಹಾಗೂ ಇತರರು ಹಾಜರಿದ್ದರು.