ಹುಬ್ಬಳ್ಳಿ: ಅವಳಿ ನಗರದ ಎಲ್ಲ ವಾರ್ಡ್ಗಳಿಗೆ ನಿರಂತರ ನೀರು ಪೂರೈಕೆ ಮಾಡಲು ಎಲ್ ಆಂಡ್ ಟಿ ಕಂಪನಿಗೆ ಟೆಂಡರ್ ನೀಡಲಾಗಿದ್ದು, 2025ಕ್ಕೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ ತಿಳಿಸಿದರು.
ಇಲ್ಲಿಯ ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿ ಶನಿವಾರ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಎಲ್ ಆಂಡ್ ಟಿ ಕಂಪನಿಗೆ ಜೂನ್ ತಿಂಗಳಲ್ಲಿ ಕಾರ್ಯಾದೇಶ ನೀಡಲಾಗಿದೆ. ಅವರು ಮೊದಲ 6 ತಿಂಗಳು ಸಮೀಕ್ಷೆ ನಡೆಸಲಿದ್ದಾರೆ. ಬಳಿಕ ನಾಲ್ಕೂವರೆ ವರ್ಷ ಕಾಮಗಾರಿ ಅನುಷ್ಠಾನಗೊಳಿಸುವರು. ಮುಂದಿನ 7 ವರ್ಷಗಳ ಕಾಲ ನಿರ್ವಹಣೆ ಅವರದ್ದೇ ಆಗಿದ್ದು, 1206 ಕೋಟಿ ರೂ. ಯೋಜನಾ ವೆಚ್ಚವಾಗಿದೆ ಎಂದು ಹೇಳಿದರು.
ಸಂಪೂರ್ಣ ಅವಳಿ ನಗರಕ್ಕೆ ಒಳಚರಂಡಿ ವ್ಯವಸ್ಥೆ ಕಲ್ಪಿಸಲು 492 ಕೋ. ರೂ. ವೆಚ್ಚದ ಪ್ರಸ್ತಾವನೆ ನಗರಾಭಿವೃದ್ಧಿ ಇಲಾಖೆ ಮುಂದಿದೆ. ಶೀಘ್ರದಲ್ಲೇ ಸಚಿವ ಸಂಪುಟದ ಮುಂದೆ ಬರಲಿದೆ. 126 ಕೋ. ರೂ. ವೆಚ್ಚದ ನಗರೋತ್ಥಾನ ಯೋಜನೆಯ ಕಾಮಗಾರಿಯ ಕ್ರಿಯಾ ಯೋಜನೆಗೆ ಮಂಜುರಾತಿ ದೊರೆತಿದ್ದು 4 ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದರು.
ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಪಾಲಿಕೆ ಮುಖ್ಯ ಲೆಕ್ಕಾಧಿಕಾರಿ ಶಂಕರಾನಂದ ಬನಶಂಕರಿ, ಅಧಿಕಾರಿಗಳು ಇದ್ದರು. ವಲಯ ಅಧಿಕಾರಿ ಎಸ್.ಸಿ. ಬೇವೂರ ನಿರ್ವಹಿಸಿದರು.
ಈದ್ಗಾ ಮೈದಾನ
ಕಿತ್ತೂರ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ ಧ್ವಜಾರೋಹಣ ನೆರವೇರಿಸಿದರು. ಮಾಜಿ ಮೇಯರ್ಗಳಾದ ಸುಧೀರ ಸರಾಫ್, ಡಿ.ಕೆ. ಚವ್ಹಾಣ, ಸ್ಮಾರ್ಟ್ ಸಿಟಿ ಲಿಮಿಟೆಡ್ನ ವಿಶೇಷಾಧಿಕಾರಿ ಎಸ್.ಎಚ್. ನರೇಗಲ್, ಇತರರು ಇದ್ದರು. ಬಳಿಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.