ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಫೆ.23 ರಿಂದ ಎರಡು ದಿನಗಳ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ 1,500 ಕೋಟಿ ರೂ. ವೆಚ್ಚದ ವಿವಿಧ ನೀರಾವರಿ ಯೋಜನೆಗಳ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದರು.
ಫೆ.23ರಂದು ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿರುವ ಸಿಎಂ 24ರ ಬೆಳಗ್ಗೆ 10.30ಕ್ಕೆ ನಗರದ ಎನ್ಇಎಸ್ ಮೈದಾನದಲ್ಲಿ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸೇರಿ ಹಲವು ಸಚಿವರು ಭಾಗವಹಿಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
24ರ ಬೆಳಗ್ಗೆ 11.30ಕ್ಕೆ ಸೊರಬ ತಾಲೂಕು ಆನವಟ್ಟಿಯಲ್ಲಿ ಮೂಗೂರು-ಮೂಡಿ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಸಿಎಂ ಬಿಎಸ್ವೈ, ಬೃಹತ್ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಪಾಲ್ಗೊಳ್ಳಲಿದ್ದಾರೆ ಎಂದರು.
ಅದೇದಿನ ಸಂಜೆ 4.30ಕ್ಕೆ ಶಿಕಾರಿಪುರದಲ್ಲಿ ಹೊಸಹಳ್ಳಿ ಹಾಗೂ ಪುರದ ಕೆರೆ ಏತ ನೀರಾವರಿ ಯೋಜನೆಗೆ ಸಿಎಂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 60 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯ ಕಟ್ಟಡ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಹಾಗೂ ಡಿಪೋ ನಿರ್ವಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಗುವುದು. ಆರೋಗ್ಯ ಸಚಿವ ಬಿ.ಶ್ರೀರಾಮುಲು ಉಪಸ್ಥಿತರಿರುತ್ತಾರೆ. ಶಿಕಾರಿಪುರ ತಾಲೂಕಿನ ವಿವಿಧ ಶಾಲೆಗಳ ನೂತನ ಕಟ್ಟಡವನ್ನು ಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಅಂದು ಸಂಜೆ 6ಕ್ಕೆ ರಾಜ್ಯಮಟ್ಟದ ಜಾನಪದ ಉತ್ಸವಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮುಂತಾದವರು ಭಾಗವಹಿಸಲಿದ್ದಾರೆ ಎಂದರು.
ಇಎಸ್ಐ ಆಸ್ಪತ್ರೆ-ಎಂಪಿಎಂ: ಶಿವಮೊಗ್ಗದಲ್ಲಿ 100 ಹಾಸಿಗೆ ಸಾಮರ್ಥ್ಯದ ಇಎಸ್ಐ ಆಸ್ಪತ್ರೆ ನಿರ್ವಣಕ್ಕೆ ಸಂಬಂಧಿಸಿ ಅಂತಿಮ ಹಂತದ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಇಎಸ್ಐ ಆಸ್ಪತ್ರೆಗೆ ಶಿವಮೊಗ್ಗದ ನವುಲೆಯಲ್ಲಿ 5 ಎಕರೆ ಜಾಗ ಮಂಜೂರಾಗಿದೆ. 125 ಕೋಟಿ ರೂ. ಯೋಜನೆ ಕೆಲ ತಿಂಗಳಲ್ಲಿ ಅನುಷ್ಠಾನವಾಗಲಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದರು. ಎಂಪಿಎಂ ಆರಂಭಕ್ಕೆ ಸಂಬಂಧಿಸಿ ಪ್ರಯತ್ನಗಳು ನಡೆಯುತ್ತಿವೆ. ಅದನ್ನು ಖಾಸಗೀಕರಣ ಮಾಡುವ ಚಿಂತನೆಯಿದೆ. ಕಾರ್ಖಾನೆಗೆ 250 ಕೋಟಿ ರೂ. ಸಾಲವಿದೆ. ಅದನ್ನು ತೀರಿಸಬೇಕು. ಕಾರ್ವಿುಕ ಹಾಗೂ ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳಿವೆ. ಅದೆಲ್ಲದಕ್ಕೂ ಪರಿಹಾರ ಕಂಡುಕೊಳ್ಳಬೇಕಿದೆ ಎಂದರು.