ಲಖನೌ: ಆಘಾತಕಾರಿ ಘಟನೆಯೊಂದರಲ್ಲಿ ಕಸ್ಟಡಿಯಲ್ಲಿದ್ದ ಮೂವರು ಕಳ್ಳರು ಜನನಿಬಿಡ ಪ್ರದೇಶದಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿರುವ ಘಟನೆ ಉತ್ತರಪ್ರದೇಶದ ಝಾನ್ಸಿ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಸಂಬಂಧ ಉತ್ತರಪ್ರದೇಶ ಸರ್ಕಾರ 8 ಮಂದಿ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ತನಿಖೆಗೆ ಆದೇಶಿಸಿದೆ.
ಪರಾರಿಯಾಗಿರುವವರನ್ನು ಬ್ರಿಜೇಂದ್ರ (27), ಜ್ಞಾನಪ್ರಸಾದ್ (23), ಶೈಲೇಂದ್ರ (20) ಎಂದು ಗುರುತಿಸಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರ ಕಾರ್ಯವೈಖರಿ ಸಾಕಷ್ಟು ಖಂಡನೆಗೆ ಗುರಿಯಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ವಿವಿಧ ಅಪರಾಧ ಪ್ರಕರಣಗಳಲ್ಲಿ ಬಂಧಿತರಾಗಿದ್ದ ಏಳು ಮಂದಿಯನ್ನು ರೈಲ್ವೆ ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಪೊಲೀಸ್ ಅಧಿಕಾರಿಗಳು ಟೀ ಕುಡಿಯಲೆಂದು ನ್ಯಾಯಾಲಯಕ್ಕೆ ಕೂಗಳತೆ ದೂರದಲ್ಲಿ ವಾಹನವನ್ನು ನಿಲ್ಲಿಸಿದ್ದಾರೆ.
ಇದನ್ನೂ ಓದಿ: ಡೊನಾಲ್ಡ್ ಟ್ರಂಪ್ ಮಗನ ಎಕ್ಸ್ ಖಾತೆ ಹ್ಯಾಕ್ ಮಾಡಿ ಅಪ್ಪ ನಿಧನರಾಗಿದ್ದಾರೆಂದು ಪೋಸ್ಟ್!
ಇದನ್ನೇ ಅವಕಾಶ ಮಾಡಿಕೊಂಡ ಮೂವರು ಆರೋಪಿಗಳು ವ್ಯಾನಿನ ಬಾಗಿಲು ತೆರೆದಿರುವುದನ್ನು ನೋಡಿ ಪರಾರಿಯಾಗಿದ್ದಾರೆ. ವ್ಯಾನಿನಲ್ಲಿದ್ದ ನಾಲ್ವರು ಈ ಬಗ್ಗೆ ಪೊಲೀಸರಿಗೆ ತಕ್ಷಣವೇ ತಿಳಿಸಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ತಲೆಮಾರಿಸಿಕೊಂಡಿರುವ ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದ್ದು, ಅವರ ಬಂಧನಕ್ಕಾಗಿ ಮೂರು ವಿಶೇಷ ತಂಡವನ್ನು ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ವಶಕ್ಕೆ ಪಡೆಯಲಾಗುವುದು.
ಪ್ರಕರಣ ಸಂಬಂಧ ಮೂವರು ಸಬ್ಇನ್ಸ್ಪೆಕ್ಟರ್ ಸೇರಿದಂತೆ ಎಂಟು ಮಂದಿ ಪೊಲೀಸರನ್ನು ಕರ್ತವ್ಯ ಲೋಪ ಆರೋಪದಡಿ ಅಮಾನತು ಮಾಡಲಾಗಿದ್ದು, ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಸಂಬಂಧ ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿ ಘಟನೆ ಕುರಿತು ಮಾಹಿತಿ ನೀಡಿದ್ದಾರೆ.