ಯಲ್ಲಾಪುರ: ತಾಲೂಕಿನ ಕಿರವತ್ತಿ ಸಮೀಪದ ದಾಂಡೇಲಿವಾಡದಲ್ಲಿ 30ಕ್ಕೂ ಹೆಚ್ಚು ಜನರಿಗೆ ವಾಂತಿ-ಭೇದಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬುಧವಾರ ಆರೋಗ್ಯ ಇಲಾಖೆಯ ಸಿಬ್ಬಂದಿ ಗ್ರಾಮದ ಮನೆ-ಮನೆಗೆ ತೆರಳಿ ಆರೋಗ್ಯ ಸಮೀಕ್ಷೆ ನಡೆಸಿದರು.
ಗ್ರಾಮದ ಸುಮಾರು 16 ಮನೆಗಳ 30 ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡಿದ್ದು, ಕಿರವತ್ತಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಸಂತೊಷ ಕುಮಾರ ಭೇಟಿ ನೀಡಿ ಚಿಕಿತ್ಸೆ ನೀಡಿದರು. ಕಳಪೆ ಹಾಗೂ ಕೊಳೆತ ಮೀನು ಸೇವನೆಯಿಂದಾಗಿ ಈ ರೀತಿ ಅನಾರೋಗ್ಯ ಉಂಟಾಗಿದೆ ಎಂಬ ಅಭಿಪ್ರಾಯವನ್ನು ಸ್ಥಳೀಯರು ವ್ಯಕ್ತಪಡಿಸುತ್ತಿದ್ದಾರೆ.
ಬುಧವಾರ ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ, ಸ್ವಚ್ಛತೆ, ನೈರ್ಮಲ್ಯತೆ ಕಾಪಾಡಿಕೊಳ್ಳಬೇಕು, ಬಿಸಿ ನೀರು ಕುಡಿಯಬೇಕು ಎಂದು ಜನರಲ್ಲಿ ಅರಿವು ಮೂಡಿಸಿದರು. ಜನರ ಆರೋಗ್ಯ ತಪಾಸಣೆ ನಡೆಸಿ, ಅಗತ್ಯವಿದ್ದವರಿಗೆ ಮಾತ್ರೆ, ಔಷಧ ವಿತರಿಸಿದರು. ಕಿರವತ್ತಿ ಗ್ರಾಪಂನಿಂದ ಗ್ರಾಮದಲ್ಲಿನ ಐದು ಮಿನಿವಾಟರ್ ಟ್ಯಾಂಕ್ಗಳನ್ನು ಕ್ಲೋರಿನ್ ಬಳಸಿ ಸ್ವಚ್ಛಗೊಳಿಸಲಾಯಿತು.