More

    ಶ್ರೀಸಿದ್ದೇಶ್ವರ ಸ್ವಾಮೀಜಿ ನಡೆದಾಡಿದ ನಾಡಿನಲ್ಲಿ 37ನೇ ‘ರಾಜ್ಯ ಪತ್ರಕರ್ತರ ಸಮ್ಮೇಳನ’; ಎಷ್ಟು ದಿನ, ಏನು ವಿಶೇಷ?

    ವಿಜಯಪುರ: ಬಸವನಾಡು, ಗೊಮ್ಮಟಬೀಡು, ಶ್ರೀ ಸಿದ್ದೇಶ್ವರ ಸ್ವಾಮೀಜಿಯ ಕಾರ್ಯಕ್ಷೇತ್ರವೂ ಆಗಿರುವ ವಿಜಯಪುರದಲ್ಲಿ ಫೆ. 4 ಮತ್ತು 5ರಂದು 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ನಡೆಯಲಿದೆ. ಇಂದು ನಗರದ ಪತ್ರಿಕಾ ಭವನದಲ್ಲಿ ಸಮ್ಮೇಳನದ ಸಿದ್ಧತೆಗಳನ್ನು ಪರಿಶೀಲಿಸಲು ಕರೆಯಲಾಗಿದ್ದ ವಿವಿಧ ಸಮಿತಿಗಳ ಸಭೆಯ ಸಂದರ್ಭ‌ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯುಜೆ)ದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಸಮ್ಮೇಳನ ಯಶಸ್ಸಿಗಾಗಿ ಎಲ್ಲರ ಸಹಕಾರ ಕೋರಿದರು.

    ಐತಿಹಾಸಿಕ ವಿಜಯಪುರ ನಗರದಲ್ಲಿ ಪ್ರಪ್ರಥಮ ಬಾರಿಗೆ ಪತ್ರಕರ್ತರ ರಾಜ್ಯ ಸಮ್ಮೇಳನ ಆಯೋಜಿಸಲಾಗಿದೆ. ಗಡಿಭಾಗದಲ್ಲಿ ನಡೆಯುವ ಈ ಸಮ್ಮೇಳನ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ ಎಂದು ಅವರು ತಿಳಿಸಿದರು.

    ರಾಜ್ಯದ ಬೇರೆ-ಬೇರೆ ಜಿಲ್ಲೆಗಳಿಂದ ಆಗಮಿಸುವ ಪ್ರತಿನಿಧಿಗಳಿಗೆ ಊಟ, ವಸತಿ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಿ ಒಳ್ಳೆಯ ಆತಿಥ್ಯ ನೀಡಿದರೆ ಬೇರೆ ಜಿಲ್ಲೆಗಳಿಂದ ಬಂದ ಪ್ರತಿನಿಧಿಗಳು ಈ ಜಿಲ್ಲೆಯ ಬಗ್ಗೆ ಮನದಲ್ಲಿ ಸವಿನೆನಪು ಇಟ್ಟುಕೊಂಡು ತಮ್ಮೂರಿಗೆ ಹೋಗುವರು. ಈ ಸಮ್ಮೇಳನ ನಮ್ಮ ಮನೆಯ ಕಾರ್ಯಕ್ರಮವೆಂದು ತಿಳಿದು ಎಲ್ಲರೂ ಉತ್ಸಾಹದಿಂದ ಒಗ್ಗೂಡಿ ಕೆಲಸ ಮಾಡುವ ಮೂಲಕ ಸಮ್ಮೇಳನದ ಯಶಸ್ಸಿಗೆ ಕಾರಣರಾಗಬೇಕು ಎಂದು ಅವರು ಹೇಳಿದರು.

    ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಜ.9 ಮತ್ತು 10‌ರಂದು ಹಮ್ಮಿಕೊಂಡಿದ್ದ ಈ ಸಮ್ಮೇಳನವನ್ನು ಮುಂದೂಡಿ, ಫೆ. 4 ಮತ್ತು 5ರಂದು ನಡೆಸಲು ದಿನ ನಿಗದಿಗೊಳಿಸಲಾಗಿದೆ ಎಂದರು.

    ಶ್ರೀಸಿದ್ದೇಶ್ವರ ಶ್ರೀಗಳು ಈ ಸಮ್ಮೇಳನದ ಸಾನ್ನಿಧ್ಯ ವಹಿಸಲು ಸಂತೋಷದಿಂದ ಒಪ್ಪಿಕೊಂಡು ಸಮ್ಮೇಳನ ಗಡಿಭಾಗದಲ್ಲಿ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದ್ದರು. ಅವರ ಸಾನ್ನಿಧ್ಯದಲ್ಲಿ ಈ ಸಮ್ಮೇಳನ ನಡೆಯಬೇಕಾಗಿತ್ತು. ಆದರೆ ಅವರು ನಮ್ಮನ್ನಗಲಿರುವುದು ತುಂಬಾ ದುಃಖ ಉಂಟು ಮಾಡಿದೆ ಎಂದರು.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆ. 4ರಂದು ಬೆಳಗ್ಗೆ 10.30ಕ್ಕೆ ಈ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಸಚಿವರು, ಸ್ಥಳೀಯ ಶಾಸಕರು ಸಮ್ಮೇಳನದಲ್ಲಿ ಭಾಗವಹಿಸುವರು. ಫೆ. 5ರಂದು ಪ್ರತಿನಿಧಿಗಳ ಸಮಾವೇಶ ನಡೆಯುವುದು. ನಂತರ ಸಮಾರೋಪ ಸಮಾರಂಭ ಹಾಗೂ ಕೆಯುಡಬ್ಲ್ಯುಜೆ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಜರುಗುವುದು. ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಮುಖ್ಯ ಅತಿಥಿಯಾಗಿ ಆಗಮಿಸುವರು. ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭದಲ್ಲಿ ಹಲವಾರು ಸಚಿವರು, ಸಂಸದರು, ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸುವರು ಎಂದರು.

    ಈ ಬಾರಿ ಸಮ್ಮೇಳನದಲ್ಲಿ 3 ಗೋಷ್ಠಿಗಳನ್ನು ಆಯೋಜಿಸಲಾಗಿದೆ. ನವಮಾಧ್ಯಮ ಮತ್ತು ಪತ್ರಕರ್ತರು ಎಂಬ ವಿಷಯದ ಬಗ್ಗೆ ಒಂದು ಗೋಷ್ಠಿ ನಡೆದರೆ, ಸುದ್ದಿಮನೆ ಮತ್ತು ಮಹಿಳೆಯರು ಎಂಬ ವಿಷಯದ ಬಗ್ಗೆ ಮತ್ತೊಂದು ಗೋಷ್ಠಿ ನಡೆಯಲಿದೆ. ಗಡಿಭಾಗದ ಮಾಧ್ಯಮಗಳ ಪಾತ್ರದ ಕುರಿತು ಈ ತನಕ ಚರ್ಚೆಗಳು ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಗಡಿಭಾಗದಲ್ಲಿ ಮಾಧ್ಯಮ ಎಂಬ ವಿಷಯ ಕುರಿತು ವಿಶೇಷ ಗೋಷ್ಠಿಗಳನ್ನು ಏರ್ಪಡಿಸಲಾಗಿದೆ ಎಂದರು. ಸುದ್ದಿ ಮನೆಯಲ್ಲಿ ಪತ್ರಿಕಾ ವಿತರಕರು ಮಹತ್ವದ ಕೊಂಡಿಯಾಗಿದ್ದಾರೆ. ಆ ಕಾರಣಕ್ಕಾಗಿ ಪತ್ರಿಕಾ ವಿತರಕರ ಸಮಸ್ಯೆಗಳ ಕುರಿತು ಸಂವಾದ ನಡೆಯಲಿದೆ ಕೂಡ ನಡೆಯಲಿದೆ ಎಂದು ಶಿವಾನಂದ ತಗಡೂರು ವಿವರಿಸಿದರು.

    ಶ್ರೀಸಿದ್ದೇಶ್ವರ ಸ್ವಾಮೀಜಿ ನಡೆದಾಡಿದ ನಾಡಿನಲ್ಲಿ 37ನೇ 'ರಾಜ್ಯ ಪತ್ರಕರ್ತರ ಸಮ್ಮೇಳನ'; ಎಷ್ಟು ದಿನ, ಏನು ವಿಶೇಷ?

    ಇದೇ ಸಮ್ಮೇಳನದಲ್ಲಿ ವಿಜಯಪುರ ಜಿಲ್ಲೆಯ ಹತ್ತು ಜನ ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನವಿರುತ್ತದೆ. ಎರಡು ದಿನಗಳ ಈ ಸಮ್ಮೇಳನದಲ್ಲಿ ಐದು ಸಾವಿರಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಈಗಾಗಲೇ ಎರಡೂವರೆ ಸಾವಿರ ಪತ್ರಕರ್ತರು ಪ್ರತಿನಿಧಿಗಳಾಗಿ ನೋಂದಾಯಿಸಿಕೊಂಡಿದ್ದಾರೆ ಎಂದರು.

    ಸಂಘದ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರ, ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಉಪಾಧ್ಯಕ್ಷರಾದ ಇಂದುಶೇಖರ ಮಣೂರ, ಪ್ರಕಾಶ ಬೆಣ್ಣೂರ, ಫಿರೋಜ್ ರೋಜಿನದಾರ, ಕಾರ್ಯದರ್ಶಿಗಳಾದ ಅವಿನಾಶ ಬಿದರಿ, ಮಲ್ಲಿಕಾರ್ಜುನ ಕೆಂಭಾವಿ, ಖಜಾಂಚಿಗಳಾದ ರಾಹುಲ ಆಪ್ಟೆ, ದೀಪಕ ಶಿಂತ್ರೆ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಡಿ.ಬಿ.ವಡವಡಗಿ, ಕೆ.ಕೆ.ಕುಲಕರ್ಣಿ, ಕೌಶಲ್ಯ ಪನ್ನಾಳಕರ, ವಿಜಯವಾಣಿ ಸ್ಥಾನಿಕ ಸಂಪಾದಕ ಕೆ.ಎನ್.ರಮೇಶ, ಅಕ್ಕಮಹಾದೇವಿ ಮಹಿಳಾ ವಿ.ವಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ.ಓಂಕಾರ ಕಾಕಡೆ ಹಾಗೂ ಇನ್ನಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    ಇದಕ್ಕೂ ಮೊದಲು ಲಿಂ.ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸುವ ಮೂಲಕ ಗೌರವ ನಮನ ಸಲ್ಲಿಸಿ ನಂತರ ಎರಡು ನಿಮಿಷ ಮೌನ ಆಚರಿಸಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

    ಗಂಡ-ಹೆಂಡಿರ ಜಗಳ ಚೂರಿ ಇರಿಯುವ ತನಕ; ಟೀ ಕೇಳಿದ್ದಕ್ಕೆ ಪತಿಗೆ ಚಾಕು ಚುಚ್ಚಿದ ಪತ್ನಿ!

    ನಾಯಿಯನ್ನು ನಾಯಿ ಎಂದ ಪಕ್ಕದ ಮನೆಯವನನ್ನು ಕೊಂದೇ ಬಿಟ್ಟ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts