ಬೆಂಗಳೂರು: ಲೋಕಸಭಾ ಚುನಾವಣೆಯ ಮತದಾನದ ಹಿನ್ನೆಲೆಯಲ್ಲಿ ಬೆಂಗಳೂರು ನಗರದಾದ್ಯಂತ ಎಲ್ಲ ರೀತಿಯ ಮದ್ಯದಂಗಡಿಗಳು ಹಾಗೂ ದ್ಯ ಮಾರಾಟ ಮಳಿಗೆಗಳು ಬಂದ್ ಅಗಲಿವೆ.
ಮತದಾನದ ದಿನ ಶಾಂತಿ ಕಡದದಿರಲು ಮುಂಜಾಗ್ರತಾ ಕ್ರಮವಾಗಿ ಬುಧವಾರ ಸಂಜೆ 6 ಗಂಟೆಯಿಂದ ಶುಕ್ರವಾರ ಮಧ್ಯರಾತ್ರಿ 12ರ ವರೆಗೆ ಮದ್ಯ ಮಾರಾಟಕ್ಕೆ ಅವಕಾಶ ಇರುವುದಿಲ್ಲ. ಎಲ್ಲ ರೀತಿಯ ಸಗಟು/ಚಿಲ್ಲರೆ ಮಾರಾಟ ಮಳಿಗೆಗಳು ಸೇರಿ ಲಿಕ್ಕರ್ ಶಾಪ್, ವೈನ್ ಶಾಪ್, ಬಾರ್, ಹೋಟೆಲ್, ರೆಸ್ಟೋರೆಂಟ್ ಅಥವಾ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಬಿ.ದಯಾನಂದ್ ತಿಳಿಸಿದ್ದಾರೆ.
ನಿಯಮ ಮೀರಿ ಮದ್ಯದಂಗಡಿಗಳನ್ನು ತೆರೆದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಚುನಾವಣಾ ವೀಕ್ಷಕರು ಮದ್ಯದಂಗಡಿಗಳ ಮೇಲೂ ನಿಗಾ ಇಡಲಿರುವುದರಿಂದ ತಪ್ಪು ಕಂಡುಬಂದಲ್ಲಿ ಶಿಸ್ತುಕ್ರಮ ತೆಗೆದುಕೊಳ್ಳಲು ಮುಕ್ತ ಅವಕಾಶ ನೀಡಲಾಗಿದೆ ಎಂದು ನಗರ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಎಸ್ಐ ವಿರುದ್ಧ ದೂರು: ಆಯೋಗಕ್ಕೆ ವರದಿ
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಿರುವ ಆರೋಪ ಹೊತ್ತಿರುವ ಇನ್ಸ್ಪೆಕ್ಟರ್ ಅಜಯ್ ಸಾರಥಿ ವಿರುದ್ಧ ಶಾಸಕ ಮುನಿರತ್ನ ದೂರು ನೀಡಿದ್ದರು. ದೂರು ಆಧರಿಸಿ ತನಿಖೆ ನಡೆಸಿ ವರದಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಪ್ರತಿಕ್ರಿಯಿಸಿದ್ದಾರೆ.