ಬೆಳಗಾವಿ: ಲೋಕಸಭೆ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜ್ಯದಲ್ಲಿ ಎರಡನೇ ಹಂತದ ಮತದಾನಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಇದೀಗ ಮಹತ್ವದ ಬೆಳವಣಿಗೆ ಒಂದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಹಣ ಹಂಚುತ್ತಿದ್ದ ಐವರನ್ನು ಬಿಜೆಪಿ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಘಟನೆಯು ಬೆಳಗಾವಿ ಜಿಲ್ಲೆ ಗೋಕಾಕ್ ವಿಧಾನಸಭಾ ಕ್ಷೇತ್ರದ ಅಂಕಲಗಿ ಗ್ರಾಮದಲ್ಲಿ ನಡೆದಿದ್ದು, ಬಂಧಿತರಿಂದ 20 ಲಕ್ಷ ರೂಪಾಯಿ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಧಿತರನ್ನು 2023ರ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಡಾ.ಮಹಾಂತೇಶ್ ಕಡಾಡಿ, ಭದ್ರಾವತಿ ಮೂಲದ ಇಬ್ಬರು ಯುವಕರು ಹಾಗೂ ಹರ್ಷಾ ಶುಗರ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಎಂದು ಗುರುತಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಅಂಕಲಗಿ ಗ್ರಾಮದಲ್ಲಿ ಹಣ ಹಂಚುತ್ತಿರುವ ಬಗ್ಗೆ ನಮಗೆ ಬಿಜೆಪಿ ಕಾರ್ಯಕರ್ತರು ಕರೆ ಮಾಡಿ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ತೆರಳಿ ಐವರನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರ ಪೈಕಿ ಇಬ್ಬರು ಕಾಂಗ್ರೆಸ್ ಅಭ್ಯರ್ಥಿ ಪರ ಹಣ ಹಂಚಲು ಬಂದಿದ್ದಾಗಿ ಒಪ್ಪಿಕೊಂಡಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.