ಬೆಂಗಳೂರು: ಕಳೆದ ವರ್ಷ ರಾಜ್ಯದಲ್ಲಿ ವಶಪಡಿಸಿಕೊಳ್ಳಲಾಗಿರುವ 50 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿವಿಧ ಪ್ರಕಾರದ ಡ್ರಗ್ಸ್ ಅನ್ನು ಸರ್ಕಾರ ಶನಿವಾರ ನಾಶಪಡಿಸಲಿದೆ. ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಅಂತರಾಷ್ಟ್ರೀಯ ಡ್ರಗ್ ವಿರೋಧಿ ದಿನದ ಅಂಗವಾಗಿ ನ್ಯಾಯಾಲಯದ ಆದೇಶ ಮೇರೆಗೆ ಡ್ರಗ್ಸ್ ನಾಶ ಮಾಡಲಾಗುವುದು ಎಂದು ತಿಳಿಸಿದರು. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ವಶಪಡಿಸಿಕೊಳ್ಳಲಾಗಿರುವ ಮಾದಕ ವಸ್ತುಗಳನ್ನು ನಾಶ ಪಡಿಸಲಾಗುವುದು. ಬೆಂಗಳೂರು ವ್ಯಾಪ್ತಿಯಲ್ಲಿ ವಶಪಡಿಸಿಕೊಂಡ ಮಾದಕವಸ್ತುವನ್ನು ದಾಬಸ್ಪೇಟೆಯಲ್ಲಿ ನಾಶಪಡಿಸಲಾಗುತ್ತದೆ. ಜಿಲ್ಲೆಯದ್ದು ಆಯಾ ಜಿಲ್ಲೆಯಲ್ಲೇ ನಾಶಪಡಿಸಲಾಗುತ್ತದೆ ಎಂದು ವಿವರಿಸಿದರು.
ಗಾಂಜಾ-ಅಫೀಮು, ಬ್ರೌನ್ ಶುಗರ್, ಹೆರಾಯಿನ್, ಚರಸ್, ಕೊಕೆನ್ ಸೇರಿ ಒಟ್ಟು 12 ಪ್ರಕಾರದ 50.23 ಕೋಟಿ ಮೊತ್ತದ ಮಾದಕ ವಸ್ತುಗಳನ್ನು ನಾಶ ಪಡಿಸಲಾಗುವುದು ಎಂದ ಬೊಮ್ಮಾಯಿ, 2020ನೇ ಸಾಲಿನಲ್ಲಿ ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಒಟ್ಟು 4066 ಪ್ರಕರಣಗಳನ್ನು ದಾಖಲಿಸಿಕೊಂಡು 5291 ಜನರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಪಿಐಟಿ ಎನ್ಡಿಪಿಎಸ್ ಕಾಯಿದೆ (ಪ್ರಿವೆನ್ಶನ್ ಆಫ್ ಇಲ್ಲಿಸಿಟ್ ಟ್ರಾಫಿಕಿಂಗ್ ನಾಕೋಟಿಕ್ ಡ್ರಗ್ಸ್ ಸೈಕ್ಯಾಟ್ರಿಕ್ ಸಬಸ್ಟನ್ಸ್) ಅಡಿ ಡ್ರಗ್ಸ್ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಈ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಇದು ಒಂದು ರೀತಿ ಗೂಂಡಾ ಕಾಯಿದೆ ಇದ್ದಂತೆ. ಅಷ್ಟು ಬೇಗ ಜಾಮೀನು ಸಿಗುವುದಿಲ್ಲ. ವಿದೇಶಿಗರು ಸೇರಿ ಹಲವರನ್ನು ಈ ಕಾಯಿದೆ ಅಡಿ ಬಂಧಿಸಲಾಗಿದೆ ಎಂದು ಹೇಳಿದರು.
ಎನ್ಡಿಪಿಎಸ್ ಕಾಯ್ದೆಯನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು. ಈ ಹಿನ್ನೆಲೆಯಲ್ಲಿ ನ್ಯಾಷನಲ್ ಲಾ ಸ್ಕೂಲ್ ಜತೆ ಮಾತುಕತೆ ನಡೆಯುತ್ತಿದೆ. ಬರುವ ಅಧಿವೇಶನದಲ್ಲಿ ಈ ಕಾಯ್ದೆಗೆ ನಿಯಮಗಳನ್ನು ರೂಪಿಸಲಾಗುವುದು ಎಂದು ತಿಳಿಸಿದ ಬೊಮ್ಮಾಯಿ, ಸೆಲೆಬ್ರಿಟಿಗಳ ಡ್ರಗ್ಸ್ ಪ್ರಕರಣದ ತನಿಖೆ ಮುಗಿದಿದೆ. ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಪ್ರಕರಣವನ್ನು ರ್ತಾಕ ಅಂತ್ಯಕ್ಕೆ ಒಯ್ಯಲಾಗುವುದು ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಕಳೆದ ವರ್ಷ ನಮ್ಮ ಪೋಲಿಸರು ಉತ್ತಮ ಕೆಲಸ ಮಾಡಿದ್ದಾರೆ. ಅವರ ಕೆಲಸದ ಬಗ್ಗೆ ಮೆಚ್ಚುಗೆ ಇದೆ. ಒಂದೇ ವರ್ಷದಲ್ಲಿ ದೊಡ್ಡ ಪ್ರಮಾಣದಲ್ಲಿ ಡ್ರಗ್ಸ್ ಜಾಲಗಳನ್ನು ಭೇದಿಸಿದ್ದಾರೆ ಎಂದವರು ಹೇಳಿದರು.