More

    50 ಲಕ್ಷ ರೂ. ನಗದು ದೋಚಿದ ದುಷ್ಕರ್ಮಿಗಳು

    ಗೋಣಿಕೊಪ್ಪ: ಪೊನ್ನಂಪೇಟೆ ತಾಲೂಕಿನ ದೇವರಪುರದಲ್ಲಿ ಶನಿವಾರ ಕೇರಳ ವಾಹನವನ್ನು ಅಡ್ಡಗಟ್ಟಿರುವ ದುಷ್ಕರ್ಮಿಗಳು, ಸುಮಾರು 50 ಲಕ್ಷ ರೂ. ನಗದು ಹಾಗೂ ವಾಹನವನ್ನು ಅಪಹರಿಸಿದ್ದಾರೆ.

    ಕೇರಳದ ಮಲಪ್ಪುರಂ ಜಿಲ್ಲೆಯ ತಿರುವರಾಂಗದಿ ತಾಲೂಕಿನ ಕೊಡಕಾಡ್ ನಿವಾಸಿ, ಗುತ್ತಿಗೆದಾರ ಕೆ. ಶಮ್ಜದ್ (38) ಎಂಬುವರು ನೀಡಿರುವ ದೂರನ್ನು ಆಧರಿಸಿ ಕೊಡಗು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    ಶಮ್ಜದ್ ಕೇರಳದ ಕೋಯಿಕೋಡ್‌ನ ಅಡರೂರು ಪಂಚಾಯಿತಿ ವ್ಯಾಪ್ತಿಯ ವಿದ್ಯಾರ್ಥಿ ಅಫ್ನು (22) ಎಂಬುವರೊಂದಿಗೆ ಶುಕ್ರವಾರ ತಮ್ಮ ಕಾರಿನಲ್ಲಿ ಮೈಸೂರಿಗೆ ತೆರಳಿದ್ದರು. ಚಿನ್ನಾಭರಣವನ್ನು ಮಾರಾಟ ಮಾಡಿ ಕೇರಳಕ್ಕೆ ಮರಳುತ್ತಿದ್ದಾಗ ಶನಿವಾರ ಮುಂಜಾನೆ ಸುಮಾರು 3 ಗಂಟೆ ಸಮಯದಲ್ಲಿ ಘಟನೆ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ಕಾರಿನಲ್ಲಿ ಬರುತ್ತಿದ್ದ ವೇಳೆ ದೇವರಪುರ ವ್ಯಾಪ್ತಿಯ ರಸ್ತೆಯಲ್ಲಿ ಲಾರಿ ಕೆಟ್ಟು ನಿಂತಿದ್ದು, ಅದರ ಬಳಿ ಕಾರು ನಿಲ್ಲಿಸಲಾಗಿತ್ತು. ಈ ವೇಳೆ ಕೆಲವು ವಾಹನಗಳಲ್ಲಿ ಬಂದ 10 ರಿಂದ 15 ಜನರಿದ್ದ ತಂಡ ಮಲೆಯಾಳಂ ಭಾಷೆಯಲ್ಲಿ ಹಣ ನೀಡುವಂತೆ ಒತ್ತಾಯಿಸಿತು. ನಮ್ಮ ಬಳಿ ಹಣವಿಲ್ಲವೆಂದು ಹೇಳಿದಾಗ ಹಲ್ಲೆ ನಡೆಸಿದರು. ಬಳಿಕ ಇಬ್ಬರನ್ನೂ ಕಾರಿನಲ್ಲಿ ಕರೆದೊಯ್ದಿದ್ದು, ಅರ್ಧ ದಾರಿಯಲ್ಲಿ ಇಳಿಸಿ ನಮ್ಮ ಕಾರನ್ನು ಅಪಹರಿಸಿದ್ದಾರೆ. ಕಾರಿನಲ್ಲಿ ಚಿನ್ನಾಭರಣ ಮಾರಾಟ ಮಾಡಿದ್ದ ಹಣ ಸುಮಾರು 50 ಲಕ್ಷ ರೂ. ಇತ್ತು ಎಂದು ಶಮ್ಜದ್ ದೂರಿನಲ್ಲಿ ತಿಳಿಸಿದ್ದಾರೆ.

    ಕತ್ತಲು ವಾತಾವರಣ ಇದ್ದಿದ್ದರಿಂದ ಇಬ್ಬರಿಗೂ ಎಲ್ಲಿದ್ದೇವೆ ಎಂಬುದು ತಿಳಿಯದೆ ಒಂದೂವರೆ ಕಿ.ಮೀ. ದೂರ ನಡೆದಾಗ ಮುಖ್ಯ ರಸ್ತೆ ಎದುರಾಯಿತು. ಮುಂಜಾನೆ ಸುಮಾರು 4 ಗಂಟೆಗೆ ಪತ್ರಿಕೆಯ ವಾಹನವೊಂದರ ಸಹಾಯ ಪಡೆದು ವಿರಾಜಪೇಟೆ ಪೊಲೀಸ್ ಠಾಣೆಗೆ ತಲುಪಿದ್ದು, ಅಪರಿಚಿತ ವ್ಯಕ್ತಿಗಳು ನಮ್ಮನ್ನು ಬಿಟ್ಟುಹೋದ ಸ್ಥಳ ಗೋಣಿಕೊಪ್ಪ ಸಮೀಪದ ದೇವರಪುರ ಎಂದು ತಿಳಿದುಬಂತು. ನಂತರ ವಿರಾಜಪೇಟೆ ಪೊಲೀಸರೇ ಗೋಣಿಕೊಪ್ಪ ಠಾಣೆಗೆ ನಮ್ಮನ್ನು ಕರೆತಂದಿದ್ದು, ಇಲ್ಲಿ ದೂರು ದಾಖಲಿಸಲಾಯಿತು ಎಂದು ಶಮ್ಜದ್ ತಿಳಿಸಿದರು.

    ದೂರಿನನ್ವಯ ತಕ್ಷಣ ಕಾರ್ಯಪ್ರವೃತ್ತರಾದ ಕೊಡಗು ಪೊಲೀಸರು ತಪಾಸಣೆ ನಡೆಸಿದಾಗ ಅಪಹರಿಸಲ್ಪಟ್ಟಿದ್ದ ಕಾರು ಕೊಳತೋಡು ಗ್ರಾಮ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ. ಕಾರನ್ನು ಹಾನಿಗೊಳಿಸಲಾಗಿದ್ದು, ಸ್ಥಳಕ್ಕೆ ಐಜಿ ಡಾ.ಬೋರಲಿಂಗಯ್ಯ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.

    ಪ್ರಕರಣದ ತನಿಖೆಗೆ ವಿಶೇಷ ತಂಡ ರಚಿಸಲಾಗಿದೆ. ಹೆಚ್ಚುವರಿ ಎಸ್‌ಪಿ ಮತ್ತು ಡಿವೈಎಸ್‌ಪಿ ಮಾರ್ಗದರ್ಶನದಲ್ಲಿ ಮೂವರು ಇನ್ಸ್‌ಪೆಕ್ಟರ್‌ಗಳು ಹಾಗೂ 7 ಸಬ್ ಇನ್ಸ್‌ಪೆಕ್ಟರ್‌ಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಎಸ್ಪಿ ಕೆ.ರಾಮರಾಜನ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts