ಬೆಂಗಳೂರು: ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ 5,8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ಬೋರ್ಡ್ ಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿದ್ದ ತೀರ್ಮಾನವನ್ನು ಬುಧವಾರ ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾ.ರವಿ ಹೊಸಮನಜ ಅವರಿಂದ ಆದೇಶ ಹೊರಬಿದ್ದಿದೆ.
ಇದನ್ನೂ ಓದಿ:ಹೋಟೆಲ್ ಕೆಲಸ ಮಾಡುತ್ತಲೇ ಲೆಕ್ಚರರ್ ಆದ ಮಹಿಳೆ: ಏಕಕಾಲಕ್ಕೆ ಎರಡು ಸರ್ಕಾರಿ ಉದ್ಯೋಗ ಪಡೆದ ಸಾಧಕಿ!
ಅಲ್ಲದೆ, ಈ ಸಂಬಂಧ ಸರ್ಕಾರ ಹೊರಡಿಸಿದ್ದ ಸುತ್ತೋಲೆ ಅನೂರ್ಜಿತಗೊಳಿಸಿದೆ. ಹಾಗಾಗಿ, ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಮಾರ್ಚ್ 11 ಸೋಮವಾರದಿಂದ ಪರೀಕ್ಷೆಗಳು ಆರಂಭವಾಗಬೇಕಿದ್ದರಿಂದ ಸದ್ಯ ಮಕ್ಕಳು ಬೋರ್ಡ್ ಪರೀಕ್ಷೆ ಭಯದಿಂದ ಪಾರಾಗಲಿದ್ದಾರೆ. ರಾಜ್ಯ ಸರ್ಕಾರ 5,8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಿಗದಿಪಡಿಸಿತ್ತು.
ಡಿಸೆಂಬರ್ 2023ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ರೂಪ್ಸಾ ಅನುದಾನಿತ ಖಾಸಗಿ ಶಾಲೆಗಳ ಒಕ್ಕೂಟದ ಲೋಕೇಶ್ ತಾಳಿಕಟ್ಟೆ ಅವರು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿದೆ.
ಇದೇ ವೇಳೆ ಸರ್ಕಾರ ಸುತ್ತೋಲೆ ಹೊರಡಿಸಿದ್ದರ ಹಿಂದಿನ ಉದ್ದೇಶವನ್ನು ಕೋರ್ಟ್ ಶ್ಲಾಘಿಸಿದೆ. ಆದರೆ, ಅದು ಅನುಸರಿಸಿದ ಪ್ರಕ್ರಿಯೆ ಮತ್ತು ವಿಧಾನವೇ ಸೂಕ್ತವಾಗಿಲ್ಲ ಎಂದು ಹೇಳಿದೆ.
2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಸರ್ಕಾರ ಆದೇಶಿಸಿತ್ತು. ಹಾಗೇ 11ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ಅನುಮತಿ ನೀಡಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್ ಮೆಟ್ಟಿಲೇರಿತ್ತು.