ಚಿತ್ರದುರ್ಗ : ಆಧುನಿಕತೆಯ ಭರಾಟೆಯಲ್ಲಿ ಆರೋಗ್ಯಕರ ಜೀವನ ನಡೆಸಲು ನಿರಂತರ ಯೋಗ, ಧ್ಯಾನದ ಅಭ್ಯಾಸ ಅಗತ್ಯವಿದೆ ಎಂದು ಡಿಎಚ್ ಒ ಡಾ.ಸಿ.ಎಲ್.ಪಾಲಾಕ್ಷ ಹೇಳಿದರು. ಬುದ್ಧ ನಗರದ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಆರೋಗ್ಯ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಯೋಗ ತರಬೇತಿ ಶಿಬಿರದಲ್ಲಿ ಮಾತನಾಡಿ,ಯೋಗ ನಿತ್ಯಜೀವನದ ಒಂದು ಭಾಗವಾಗ ಬೇಕಿದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ಮಾತನಾಡಿ,ನವೆಂಬರ್ ಅಂತ್ಯದೊಳಗೆ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯ ಸಿಬ್ಬಂದಿಗೆ ಯೋಗ ತರಬೇತಿ ನೀಡಲಾಗುವುದು. ಬಳಿಕ ಸಾರ್ವಜನಿಕರಿಗೆ ಯೋಗದೆಡೆ ತಿಳಿವಳಿಕೆ ನೀಡಲಾಗುವುದು ಎಂದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ಕೆ.ಎಲ್.ವಿಶ್ವನಾಥ್ ಮಾತನಾಡಿ,ಅಲೋಪತಿ ಜತೆ ಆಯುಷ್ ಔಷಧ ಬಳಸುವ ಮೂಲಕ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳ ಬೇಕು. ಸಮುದಾಯದ ಆಯುಷ್ ಔಷಧ ಬೇಡಿಕೆ ಈಡೇರಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯ್ಕ,ನೆಹರು ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಬಷೀರ್,ಪ್ರಭಾರ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜಾನಕಿ, ಆರೋಗ್ಯ ಮೇಲ್ವಿಚಾರಕರಾದ ಎಂ.ಬಿ.ಹನುಮಂತಪ್ಪ, ಆಂಜನೇಯ ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕರು,ಆಶಾ ಕಾರ್ಯಕರ್ತೆಯರು ಹಾಜರಿದ್ದರು.