ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-73 ಮಂಗಳೂರು- ವಿಲ್ಲುಪುರಂ ರಸ್ತೆಯ ಚಾರ್ಮಾಡಿ ಘಾಟ್ ಮಾರ್ಗದಲ್ಲಿ ಕೆಲವು ಭಾರಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರು ಸಂಚರಿಸುವ ಕೆಎಸ್ಆರ್ಟಿಸಿ ಕೆಂಪು ಬಸ್ಸು, ಆರು ಚಕ್ರದ ಲಾರಿ, ನಾಲ್ಕು ಚಕ್ರದ ವಾಹನಗಳು, ಟೆಂಪೋ ಟ್ರಾವೆಲರ್, ಆಂಬುಲೆನ್ಸ್ , ಕಾರು, ಜೀಪು, ವ್ಯಾನ್, ಎಲ್ಸಿವಿ(ಮಿನಿ ವ್ಯಾನ್) ಹಾಗೂ ದ್ವಿಚಕ್ರ ವಾಹನಗಳು ಈ ಮಾರ್ಗದಲ್ಲಿ ಸಂಚರಿಸಬಹುದಾಗಿದೆ. ರಸ್ತೆಯಲ್ಲಿ ಅವಶ್ಯವಿರುವ ಕಡೆ ಸೂಚನಾ ಫಲಕ ಅಳವಡಿಸಲು ಹಾಗೂ ಸಂಚಾರ ನಿಯಂತ್ರಣ ಸಿಬ್ಬಂದಿ ನೇಮಕಗೊಳಿಸಲು ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ತಿಳಿಸಲಾಗಿದೆ.
ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕೆಲವು ಭಾರಿ ವಾಹನಗಳ ನಿರ್ಬಂಧ ಮುಂದುವರಿದಿದೆ. ಬುಲೆಟ್ ಟ್ಯಾಂಕರ್ಗಳು, ಷಿಪ್ ಕಾರ್ಗೋ ಕಂಟೈನರ್ ಹಾಗೂ ಲಾಂಗ್ ಚಾಸೀಸ್ ವಾಹನಗಳು, ಹೆವಿ ಕಮರ್ಷಿಯಲ್ ವೆಹಿಕಲ್ಸ್, ಮಲ್ಟಿ ಎಕ್ಸೆಲ್ ಟ್ರಕ್, ಟ್ರಕ್ ಟ್ರೈಲರ್, ಕೆಎಸ್ಸಾರ್ಟಿಸಿ ರಾಜಹಂಸ ಮತ್ತು ಎಲ್ಲ ಬಗೆಯ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ ಎಂದು ಪ್ರಕಟಣೆ ತಿಳಿಸಿದೆ.