ಹನೂರು: ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಅರಣ್ಯ ಉಪ ಸಂರಕ್ಷಣಾಧಿಕಾರಿ ವಿ.ಏಡುಕೊಂಡಲು ಅವರ ವರ್ಗಾವಣೆ ಆದೇಶವನ್ನು ಸರ್ಕಾರ ರದ್ದುಪಡಿಸಬೇಕೆಂದು ಆಗ್ರಹಿಸಿ ಗುರುವಾರ ರೈತ ಸಂಘದ ಪದಾಧಿಕಾರಿಗಳು ಹನೂರಿನಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ವಿ.ಏಡುಕೊಂಡಲು ಪ್ರಾಮಾಣಿಕ ಅಧಿಕಾರಿಯಾಗಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಮಲೆಮಹದೇಶ್ವರ ವನ್ಯಜೀವಿ ಧಾಮದ ವ್ಯಾಪ್ತಿಯಲ್ಲಿ ನೆಲೆಸಿರುವ ಜನರು ಗುಳೆ ಹೋಗುವುದನ್ನು ತಪ್ಪಿಸಲು ಅವರು ಪೊನ್ನಾಚಿ ಗ್ರಾಮದಲ್ಲಿ ಬಿದಿರು ಘಟಕ, ಜೇನುತುಪ್ಪ ಸಂಸ್ಕರಣಾ ಘಟಕ, ಅಗರಬತ್ತಿ ತಯಾರಿಕೆ ಘಟಕ ಸ್ಥಾಪನೆಯ ಜತೆಗೆ ಸಾಮೂಹಿಕ ಬೇಸಾಯ ಪದ್ಧತಿಗೆ ಅನುಕೂಲ ಕಲ್ಪಿಸಿದ್ದಾರೆ. ಕಾಡಾನೆಗಳ ಕಡಿವಾಣಕ್ಕೆ ರೈಲ್ವೆ ಬ್ಯಾರಿಕೇಡ್ಗಳನ್ನು ನಿರ್ಮಿಸಿದ್ದಾರೆ. ಕಾಡಂಚಿನ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅವಕಾಶ ನೀಡಿದ್ದಾರೆ. ಕಾಡಂಚಿನ ಜನರಿಗೆ ಜನವನ ಸೇತು ವಾಹನದ ಸೇವೆ ಕಲ್ಪಿಸಿದ್ದಾರೆ ಎಂದರು.
ಅಲ್ಲದೇ, ಹಲವು ದಶಕಗಳಿಂದ ಕಾಡಂಚಿನಲ್ಲಿ ನೆಲೆಸಿ ಮೂಲಸೌಕರ್ಯದಿಂದ ವಂಚಿತವಾಗಿದ್ದ ಚಂಗಡಿ ಗ್ರಾಮವನ್ನು ಸ್ಥಳಾಂತರಿಸಿ ಪುನರ್ವಸತಿ ಕಲ್ಪಿಸುವಲ್ಲಿ ಇವರ ಶ್ರಮ ಅಪಾರ. ಇನ್ನು ಜನರಿಗೆ ಅನುಕೂಲವಾಗುವಂತೆ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಯೋಜನೆ ರೂಪಿಸಿದ್ದರು. ಇಂತಹ ಸಂದರ್ಭದಲ್ಲಿ ಅವರನ್ನು ದಿಢೀರ್ ವರ್ಗಾವಣೆ ಮಾಡಿರುವುದು ಖಂಡನೀಯ ಎಂದು ಕಿಡಿಕಾರಿದರು.
ಇದಕ್ಕೂ ಮುನ್ನ ಖಾಸಗಿ ಬಸ್ ನಿಲ್ದಾಣ ಸಮೀಪದ ದಿ.ಎಚ್. ನಾಗಪ್ಪ ವೃತ್ತದ ರಸ್ತೆಯಲ್ಲಿ ಕುಳಿತ ಪ್ರತಿಭಟನಕಾರರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ರೈತ ಸಂಘದ ಹನೂರು ಘಟಕಾಧ್ಯಕ್ಷ ಚಂಗಡಿ ಕರಿಯಪ್ಪ, ರೈತ ಮುಖಂಡರಾದ ದೊಡ್ಡೇಗೌಡ, ಶಾಂತಕುಮಾರ್, ಷಣ್ಮುಗಂ, ರಂಗೇಗೌಡ, ಮುತ್ತೇಗೌಡ, ಉದೇಶ್, ಗುಂಡುರಾವ್ ಇನ್ನಿತರರಿದ್ದರು.