ಬೆಳಗಾವಿ: ಈ ಮೂವರು ವಿದ್ಯಾರ್ಥಿನಿಯರು ನಡೆದುಕೊಂಡು ಹೋಗುವಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದುಕೊಂಡು ಹೋಗಿದೆ. ಅವರಲ್ಲಿ ಒಬ್ಬಾಕೆ ಆಸ್ಪತ್ರೆಯಲ್ಲಿ ಪ್ರಾಣ ಕಳೆದುಕೊಂಡಿದ್ದು ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ.
ಈ ಹಿಂದೆ ಸ್ಥಳೀಯರು ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಆದರೂ ಸಾರಿಗೆ ಇಲಾಖೆ ಅಧಿಕಾರಿಗಳು ಸ್ಪಂದಿಸಿರಲಿಲ್ಲ. ಹೀಗಾಗಿ ಆ ವಿದ್ಯಾರ್ಥಿನಿಯರ ಪ್ರದೇಶದಲ್ಲಿ ಬಸ್ ವ್ಯವಸ್ಥೆ ಇಲ್ಲದಿದ್ದ ಕಾರಣ ಈ ಮೂವರು ವಿದ್ಯಾರ್ಥಿನಿಯರು ನಡೆದುಕೊಂಡು ಹೊರಟಿದ್ದರು. ಈ ಸಂದರ್ಭ ಅವರಿಗೆ ಕಾರು ಡಿಕ್ಕಿ ಹೊಡೆದಿದೆ. ಚಿಕಿತ್ಸೆ ಫಲಿಸದೇ ಓರ್ವ ವಿದ್ಯಾರ್ಥಿನಿ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಇನ್ನಿಬ್ಬರಿಗೆ ಗಂಭೀರ ಗಾಯಗಳು ಉಂಟಾಗಿವೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ನಿಚ್ಛಣಿಕೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಿತ್ತೂರು ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿಯ ಅಕ್ಕವ್ವ ಹೂಲಿಕಟ್ಟಿ ಎಂಬ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.
ನಿನ್ನೆಯಷ್ಟೇ ಬಸ್ ವ್ಯವಸ್ಥೆ ಇಲ್ಲದಕ್ಕೆ ಕಿತ್ತೂರು ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಮೃತ ಅಕ್ಕವ್ವ ಕಳೆದ 15 ದಿನಗಳ ಹಿಂದೆಯೇ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರಗೆ ಮನವಿ ಸಲ್ಲಿಸಿದ್ದರು.
15 ದಿನಗಳು ಕಳೆದರೂ ಮನವಿಗೆ ಸ್ಪಂದಿಸದಕ್ಕೆ ನಿನ್ನೆಯೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಆದರೆ ಇವರು ಮನೆಗೆ ತೆರಳುವಾಗ ಈ ಘಟನೆ ನಡೆದಿದೆ. ಇದೀಗ ಪ್ರತಿಭಟನೆ ನಡೆಸಿದರೂ ಬಸ್ ವ್ಯವಸ್ಥೆ ಕಲ್ಪಿಸದ ಸಾರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ ಭುಗಿಲೆದ್ದಿದೆ.