ಬೆಂಗಳೂರು: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿದೆ.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಗಳಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆ ಸಲ್ಲಿಕೆ
ರಾಜಭವನದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
19 ತಿಂಗಳು 17 ದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದ ಅವರು ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ಆ ಸ್ಥಾನವನ್ನು ಅಲಂಕರಿಸಿದ್ದರು.
ನಾನೇ ಹೊರುತ್ತೇನೆ
ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಹಂಗಾಮಿ ಸಿಎಂ ಬಸವರಾಜ್ ಬೊಮ್ಮಾಯಿ ಜನರ ತೀರ್ಪನ್ನು ಗೌರವಯುತವಾಗಿ ಒಪ್ಪಿಕೊಂಡಿದ್ಸೇವೆ. ಪಕ್ಷಕ್ಕೆ ಆದ ಹಿನ್ನಡೆಯ ಜವಾಬ್ದಾರಿಯನ್ನು ನಾನೇ ಹೊರುತ್ತೇನೆ.
ಕಳೆದ ಬಾರಿ ನಮಗೆ 104 ಸ್ಥಾನದಲ್ಲಿ ಗೆದ್ದಿದ್ದೆವು ಈ ಬಾರಿ ಪರ್ಸೆಂಟೇಜ್ ಜಾಸ್ತಿ ಬಂದ್ರು, ಕಡಿಮೆ ಸೀಟು ಬಂದಿವೆ ಏನೇ ಆಗಲಿ ಸೋಲು ಸೋಲೇ. ನಾವು ಇದರ ಬಗ್ಗೆ ಆತ್ಮವಲೋಕನ ಮಾಡಿ ಎಲ್ಲಿ ತಪ್ಪು ಆಗಿದೆ ಅದನ್ನು ಸರಿಪಡಿಸುವ ಕೆಲಸ ಮಾಡ್ತೀವಿ ಎಮದು ಹೇಳಿದ್ದಾರೆ.
ನಮ್ಮದು ಒಂದು ರಾಷ್ಟ್ರೀಯ ಪಕ್ಷ ನಾವು ಕೇವಲ ಚುನಾವಣಗೆ ಮಾತ್ರ ಕೆಲಸ ಮಾಡಲ್ಲ ರಾಷ್ಟ್ರದ ನಿರ್ಮಾಣಕ್ಕೆ ಕೆಲಸ ಮಾಡೋರು. ಇನ್ನೇನು ಕೇವಲ ೮-೧೦ ತಿಂಗಳಲ್ಲಿ ಲೋಕಸಭೆ ಚುನಾವಣೆ ಬರ್ತಿದೆ ಆ ಚುನಾವಣೆಗೆ ಪಕ್ಷ ಗಟ್ಟಿಗೊಳಿಸುವ ಕೆಲಸ ಮಾಡುತ್ತೇವೆ.
ದಿಕ್ಸೂಚಿ ಅಲ್ಲ
ರಾಜ್ಯ ವಿಧಾನಸಭೆ ಫಲಿತಾಂಶ ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಅಲ್ಲ. ನಾವು ಹಿಂದೆ ಎಷ್ಟೋ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳನ್ನು ನೋಡಿದ್ದೇವೆ. ಸೋಲಿಗೆ ಹಲವಾರು ರೀತಿಯ ಕಾರಣಗಳು ಇವೆ ಅವುಗಳನ್ನು ಎಲ್ಲವನ್ನೂ ಕುಳಿತು ಚರ್ಚೆ ಮಾಡ್ತೀವಿ.
ಏನ್ ವ್ಯತ್ಯಾಸ ಆಗಿದೆ ಎಲ್ಲಿ ಏನಾಗಿದೆ ಎಂದು ಚರ್ಚಿಸಿ, ಆಗಿದ್ದ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆ ಎಂದು ರಾಜೀನಾಮೆ ನೀಡಿದ ಬಳಿಕ ಹೇಳಿದ್ದಾರೆ.
ಸುದೀಪ್ ರಾಜಕಾರಣಿ ಅಲ್ಲ
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಸುದೀಪ್ ಅವರನ್ನು ಹೊಣೆ ಮಾಡುವುದು ಸರಿಯಲ್ಲ. ಅವ್ರು ಸ್ಟಾರ್ ಪ್ರಚಾರಕರು ಅಷ್ಟೇ ನಾನು ಈಗಾಗಲೇ ಹೇಳಿದ್ಸೀನಲ್ಲ ಈ ಸೋಲಿಗೆ ನಾನೆ ಹೊಣೆ ಹೊರುತ್ತೇನೆ ಎಂದು ಮಾತನಾಡುವ ವೇಳೆ ಪುನರುಚ್ಛರಿಸಿದ್ದಾರೆ.
ಹಂಗಾಮಿ ಸಿಎಂ ಬೊಮ್ಮಾಯಿಗೆ ಶಾಸಕರಾದ ಸುರೇಶ್ ಕುಮಾರ್, ಬೈರತಿ ಬಸವರಾಜು, ವಿಧಾನಪರಿಷತ್ ಸದಸ್ಯ ರವಿಕುಮಾರ್ ಸಾಥ್ ನೀಡಿದ್ದರು.