ಗುಂಡ್ಲುಪೇಟೆ: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ್ದ ಭರವಸೆಯಂತೆ ಐದು ಗ್ಯಾರಂಟಿಗಳನ್ನು ಸರ್ಕಾರ ಜಾರಿಗೊಳಿಸಲಿದೆ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ಹೇಳಿದರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಎದುರು ಮಂಗಳವಾರ ಕಾಂಗ್ರೆಸ್ ಆಯೋಜಿಸಿದ್ದ ಮತದಾರರಿಗೆ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದರು.
ಮಹಿಳೆಯರಿಗೆ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣ, ಜು.1ರಿಂದ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಸದಸ್ಯರಿಗೆ ಹತ್ತು ಕೆಜಿ ಅಕ್ಕಿ, 200 ಯೂನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ ಮಾಸಿಕ 2 ಸಾವಿರ ರೂ. ಸೇರಿದಂತೆ 5 ಗ್ಯಾರಂಟಿಗಳನ್ನು ನಿಶ್ಚಿತವಾಗಿ ಜಾರಿಗೆ ತರಲಾಗುವುದು ಎಂದು ಹೇಳಿದರು.
ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ಸಮುದಾಯಗಳು ಕಾಂಗ್ರೆಸ್ ಪಕ್ಷಕ್ಕೆ ಬೆನ್ನೆಲುಬಾಗಿ ನಿಂತಿದ್ದು ಪಕ್ಷದ ಗೆಲುವಿಗೆ ವರದಾನವಾಗಿದೆ. ಗಣೇಶ್ಪ್ರಸಾದ್ ತಂದೆಯ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದರು.
ಶಾಸಕ ಎಚ್.ಎಂ.ಗಣೇಶ್ಪ್ರಸಾದ್ ಮಾತನಾಡಿ, ಬಿಜೆಪಿಯವರು ಮಾಡುತ್ತಿದ್ದ ವೈಯಕ್ತಿಕ ಹಾಗೂ ಯಾವುದೇ ಟೀಕೆಗಳಿಗೂ ನಾನು ಉತ್ತರಿಸದೆ ಸುಮ್ಮನಿದ್ದೆ. ಆದರೆ, ಜನತೆಯೇ ತಕ್ಕ ಉತ್ತರ ನೀಡಿದ್ದಾರೆ. ಭ್ರಷ್ಟಾಚಾರರಹಿತ ಆಡಳಿತ ನಡೆಸುವ ಮೂಲಕ ಮಾದರಿ ಕ್ಷೇತ್ರ ಮಾಡಲಾಗುವುದು ಎಂದರು.
ಶಾಸಕರಾದ ಅನಿಲ್ ಚಿಕ್ಕಮಾದು, ದರ್ಶನ್ ಧ್ರುವನಾರಾಯಣ್, ರವಿಕುಮಾರ್, ಮಾಜಿ ಶಾಸಕ ಡಾ.ಯತೀಂದ್ರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮರಿಸ್ವಾಮಿ, ಮಾಜಿ ಸಂಸದರಾದ ಎ.ಸಿದ್ದರಾಜು, ಕಾಗಲವಾಡಿ ಶಿವಣ್ಣ, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ನಾಜಿಮುದ್ದೀನ್, ಮುನಿರಾಜು, ಎಚ್.ಎನ್.ಬಸವರಾಜು, ಕಬ್ಬಹಳ್ಳಿ ಮಹೇಶ್, ಕೆರೆಹಳ್ಳಿ ನವೀನ್ ಸೇರಿದಂತೆ ಹಲವರು ಇದ್ದರು.
ಕಾರ್ಯಕ್ರಮದ ನಮತರ ಕೃತಜ್ಞತಾ ಸಮಾರಂಭಕ್ಕೆ ಆಗಮಿಸಿದ್ದ ಸುಮಾರು 5 ಸಾವಿರಕ್ಕೂ ಹೆಚ್ಚಿನ ಜನರು ಹಾಗೂ ಕಾರ್ಯಕರ್ತರಿಗೆ ಹೋಳಿಗೆ ಊಟ ಹಾಕಿಸಲಾಯಿತು.