ಧಾರವಾಡ: ಧಾರವಾಡ ಜಿಲ್ಲೆ ಶಿಕ್ಷಣ, ಪರಿಸರ, ಉದ್ಯೋಗ, ಮೂಲ ಸೌಕರ್ಯಗಳಲ್ಲಿ ಇತರ ಜಿಲ್ಲೆಗಳಿಗೆ ಮಾದರಿ ಆಗಬೇಕು. ಈ ದಿಶೆಯಲ್ಲಿ ಸರ್ಕಾರಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಅನ್ಬುಕುಮಾರ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇಲಾಖಾವಾರು ಬಾಕಿ ಇರುವ ಪ್ರಸ್ತಾವನೆ, ಕಡತಗಳ ಮಾಹಿತಿಯನ್ನು ನೀಡಬೇಕು. ಸರ್ಕಾರದ ಹಂತದಲ್ಲಿ ಆಯಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಇಲಾಖೆ ಮುಖ್ಯಸ್ಥರೊಂದಿಗೆ ಚರ್ಚಿಸಿ ಪರಿಹರಿಸುತ್ತೇನೆ. ಎಲ್ಲ ಸರ್ಕಾರಿ ಕಟ್ಟಡ, ಶಾಲೆ, ಹಾಸ್ಟೆಲ್, ಆಸ್ಪತ್ರೆ ಆವರಣಗಳಲ್ಲಿ ಗಿಡ ನೆಡಬೇಕು. ಸಾರ್ವಜನಿಕರಿಗೆ ಗುಣಮಟ್ಟದ ಕುಡಿಯುವ ನೀರು ಸಿಗಬೇಕು. ಅಶುದ್ಧ ನೀರು ಸರಬರಾಜು ಕಂಡುಬಂದರೆ ಅಧಿಕಾರಿಗಳು ತಕ್ಷಣ ಭೇಟಿ ನೀಡಿ ಸಮಸ್ಯೆ ಪರಿಹರಿಸಬೇಕು. ಜಲ್ಜೀವನ್ ಮಿಷನ್ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.
ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಜಿಲ್ಲೆಯ 14,516 ರೈತರು ಇ- ಕೆವೈಸಿ ಮಾಡಿಸಿಕೊಳ್ಳಲು ಜಾಗೃತಿ ಮೂಡಿಸಬೇಕು. ಆಸ್ಪತ್ರೆಗಳಲ್ಲಿ ಹೆರಿಗೆ ವೇಳೆ ತಾಯಿ ಮರಣ ಪ್ರಕರಣ ಹತೋಟಿಗೆ ಗಮನಹರಿಸಬೇಕು ಎಂದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ವಿವಿಧ ಇಲಾಖೆಗಳ ವಸತಿ ನಿಲಯಗಳಿಗೆ ಹೊಸ ಕಟ್ಟಡ ಮತ್ತು ಹೊಸ ಹಾಸ್ಟೆಲ್ಗಳ ಅಗತ್ಯವಿದೆ. ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಪರಿಶೀಲಿಸಬೇಕು ಎಂದು ವಿನಂತಿಸಿದರು.