ಕಲಘಟಗಿ: ಪಂಚಮಸಾಲಿ ಸಮಾಜದ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಅ. 13ರಂದು ಹುಬ್ಬಳ್ಳಿಯ ಗಬ್ಬೂರ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ನೆರವೇರಿಸುವ ಮೂಲಕ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಪಟ್ಟಣದ ಫಕೀರಪ್ಪ ನಿಗದಿಯವರ ಮನೆಯಲ್ಲಿ ಸೋಮವಾರ ಇಷ್ಟಲಿಂಗ ಪೂಜೆ ನೆರವೇರಿಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡು ಬರಲಾಗಿದ್ದು, ಈ ಬಾರಿ ಹುಬ್ಬಳ್ಳಿಯಲ್ಲಿ ನಡೆಯಲಿದೆ ಎಂದರು.ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಹಾಗೂ ಒಬಿಸಿ ಮೀಸಲಾತಿಗೆ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿ ಹಲವು ಜಿಲ್ಲೆಗಳಲ್ಲಿ ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದೇವೆ. ಕೇವಲ ಮೀಸಲಾತಿ ಒಂದೇ ಅಲ್ಲದೆ, ರೈತರು ಮತ್ತು ಲೋಕ ಕಲ್ಯಾಣಾರ್ಥವಾಗಿ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು ಎಂದರು.
ಸಮಾಜದ ಮುಖಂಡರಾದ ಸಿ.ಬಿ. ಹೊನ್ನಿಹಳ್ಳಿ, ಡಾ. ಫಕೀರಪ್ಪ ನಿಗದಿ, ಬಿ.ವೈ. ಪಾಟೀಲ, ಪರಮಾನಂದ ಒಡೆಯರ, ಯಲ್ಲಪ್ಪ ಚವರಗಿ, ಚಂದ್ರು ಬೀಸರಳ್ಳಿ, ಬಸಪ್ಪ ಜಿನ್ನೂರು, ಜಿ.ಎನ್. ಘಾಳಿ, ಮಂಜುನಾಥ ನಾವಳ್ಳಿ, ಇತರರಿದ್ದರು.