ಬೆಂಗಳೂರು: ಪ್ರಸ್ತುತ ಬೆಳವಣಿಗೆಗಳನ್ನು ಗಮನಿಸಿದಾಗ ಮುಂದಿನ 10 ವರ್ಷಗಳಲ್ಲಿ ನಾವು ಬೆಳೆದು ಬಂದಂತಹ ಹಳ್ಳಿಗಳಲ್ಲಿನ ಸಂಸ್ಕೃತಿ ಮತ್ತು ಸಂಪ್ರದಾಯ ಮರೆತುಬಿಡುತ್ತೇವೆನೋ ಎಂಬ ವಾತಾವರಣ ನಿರ್ಮಾಣವಾಗುತ್ತಿದೆ. ಹಣಕ್ಕೆ ಹೆಚ್ಚಿನ ಮಹತ್ವ ನೀಡುತ್ತಿರುವುದರಿಂದ ನೋಟಿನಲ್ಲಿರುವ ಮಹಾತ್ಮ ಗಾಂಧೀಜಿ ಅವರು ದೇಶಕ್ಕೆ ನೀಡಿದ ಕೊಡುಗೆ ಏನೆಂಬುದನ್ನು ಮರೆಯುವ ಸಾಧ್ಯತೆಗಳು ಹೆಚ್ಚುತ್ತಿವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸಚಿವರು ಆತಂಕ ವ್ಯಕ್ತಪಡಿಸಿದರು.
ಅರಮನೆ ರಸ್ತೆಯಲ್ಲಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಶನಿವಾರ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ 105ನೇ ರಾಜ್ಯ ಪರಿಷತ್ ಮಹಾಸಭೆಯಲ್ಲಿ ಅವರು ಮಾತನಾಡಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ಅನಿವಾರ್ಯ:
ಇತ್ತೀಚಿನ ದಿನಗಳಲ್ಲಿ ಧರ್ಮ, ಜಾತಿ, ರಾಜಕೀಯ, ಮೇಲು-ಕೀಳಿನಿಂದ ನೋಡುತ್ತಿರುವ ಮಕ್ಕಳಿಗೆ ಸಮಾನತೆ ತಿಳಿಸಲು ಸ್ಕೌಟ್ಸ್ ಮತ್ತು ಗೈಡ್ಸ್ನ ಕಾರ್ಯಕ್ರಮ ಬಹಳ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ಕೆಪಿಎಸ್ ಶಾಲೆಗಳಲ್ಲಿ ಕಡ್ಡಾಯವಾಗಿ ಜಾರಿಗೊಳಿಸಸಲು ಕ್ರಮ ವಹಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿಜಿಆರ್ ಸಿಂಧ್ಯ, ರಾಜ್ಯ ಆಯುಕ್ತೆ (ಗೈಡ್ಸ್) ಗೀತಾ ನಟರಾಜ್, ರಾಜ್ಯ ಆಯುಕ್ತ (ಸ್ಕೌಟ್ಸ್) ಎಂ.ಎ. ಖಾಲಿದ್ ಉಪಾಧ್ಯಕ್ಷ ಕೊಂಡಜ್ಜಿ ಷಣ್ಮುಗಪ್ಪ ಸೇರಿ ಹಲವರು ಉಪಸ್ಥಿತರಿದ್ದರು.
ಸರ್ಕಾರದ ವತಿಯಿಂದ ಇತ್ತೀಚೆಗಷ್ಟೇ ಹುತಾತ್ಮರಾದ ಸೈನಿಕ ಕ್ಯಾ. ಎಂ.ವಿ. ಪ್ರಾಂಜಲ್ ಅವರಿಗೆ ಸ್ಮರಿಸಲು ಇಲಾಖೆ ವತಿಯಿಂದ ಗೌರವ ಸಲ್ಲಿಸಲು ಸಹಕಾರ ನೀಡಲಾಗುವುದು.
– ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ