ಗುಂಡ್ಲುಪೇಟೆ: ಆಸ್ಪತ್ರೆಗಳಿಗೆ ಅಗತ್ಯವಾದ ವೈದ್ಯರು ಹಾಗೂ ಸಿಬ್ಬಂದಿಯನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಸರ್ಕಾರ ಚಿಂತಿಸುತ್ತಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.
ಮಂಗಳವಾರ ತಾಲೂಕಿನ ಕಬ್ಬಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಅರ್ಜಿ ಸ್ವೀಕರಿಸಿ ಅವರು ಮಾತನಾಡಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪಿಜಿಷಿಯನ್ ಸೇರಿದಂತೆ ಪ್ರಮುಖ ವೈದ್ಯರ ಕೊರತೆಯಿದೆ. 20 ಸಾವಿರ ಜನಸಂಖ್ಯೆಗೆ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಆರಂಭಿಸಿದ್ದು, ಎಲ್ಲ ಆಸ್ಪತ್ರೆಗಳಲ್ಲಿಯೂ ಉತ್ತಮ ಸೌಲಭ್ಯಗಳಿದ್ದರೂ ಅಗತ್ಯ ಪ್ರಮಾಣದ ವೈದ್ಯರು ಹಾಗೂ ಸಿಬ್ಬಂದಿಯಿಲ್ಲದೆ ತೊಂದರೆಯಾಗುತ್ತಿದೆ. ಅಲ್ಲದೆ ಶಾಲೆ, ಕಾಲೇಜುಗಳಿಗೆ ಉಪನ್ಯಾಸಕರು, ಗ್ರಾಪಂಗಳಿಗೆ ಪಿಡಿಒಗಳ ಕೊರತೆಯಾಗಿದ್ದು ತೀವ್ರ ಸಮಸ್ಯೆಗಳಿವೆ. ಈ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದ್ದು , ಕಾಯಂ ಸಿಬ್ಬಂದಿ ನೇಮಕ ಆಗುವವರೆಗೆ ಹೊರಗುತ್ತಿಗೆಯಲ್ಲಿ ನಿಯೋಜನೆ ಮಾಡುವ ಬಗ್ಗೆ ಸಚಿವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ಇದು ಸಾಧ್ಯವಾದರೆ ಎಲ್ಲಾ ಆಸ್ಪತ್ರೆಗಳಿಗೂ ಅತಗ್ಯ ಸಿಬ್ಬಂದಿ ನಿಯೋಜಿಸಲಾಗುವುದು. ಸರ್ಕಾರದಿಂದ ಅನುದಾನ ಬರುತ್ತಿದ್ದಂತೆ ಹಂತಹಂತವಾಗಿ ಅವಶ್ಯಕತೆಗಳನ್ನು ಪೂರೈಸುವ ಕೆಲಸ ಮಾಡಲಾಗುವುದು ಎಂದರು.
ತಾಲೂಕು ಪಂಚಾಯಿತಿ ಇಒ ರಾಮಲಿಂಗಯ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿರಿಯಪ್ಪ, ಚಾಮುಲ್ ನಿರ್ದೆಶಕ ಎಚ್.ಎಸ್.ನಂಜುಂಡಪ್ರಸಾದ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಎಸ್.ಮಹೇಶ್, ಮುಖಂಡ ದೀಪು ಮತ್ತಿತರರಿದ್ದರು.