ಬೆಂಗಳೂರು: ಪ್ರತ್ಯೇಕ ರಾಷ್ಟ್ರ ಕುರಿತು ಸಂಸದ ಡಿ.ಕೆ.ಸುರೇಶ್ ನೀಡಿದ್ದ ಹೇಳಿಕೆಯೊಂದು ಕೈ ಪಾಳಯ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ. ಈ ಹೇಳಿಕೆ ವಿರುದ್ಧವಾಗಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿ ಡಿ.ಕೆ.ಸುರೇಶ್ ಮನೆ ಮೇಳೆ ದಾಳಿ ಮಾಡಿದ್ದಾರೆ.
ಪ್ರತ್ಯೇಕ ರಾಷ್ಟ್ರ ಬೇಕು ಎನ್ನುವ ಡಿ.ಕೆ.ಸುರೇಶ್ ಅವರ ಹೇಳಿಕೆ ಕುರಿತಾಗಿ ಅನೇಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ವಿಚಾರ ವಿರುದ್ಧ ಈಗಾಗಲೇ ಆಕ್ರೋಶ ಬುಗಿಲೆದ್ದಿದೆ. ಇಂದು ಬೆಳಗ್ಗೆ ಬಿಜೆಪಿ ಕಾರ್ಯಕರ್ತರು ಬೆಂಗಳೂರಿನಲ್ಲಿರುವ ಡಿ.ಕೆ.ಸುರೇಶ್ ಅವರ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಪೊಲೀರು ಮನೆ ಸುತ್ತಮುತ್ತ ಬಿಗಿಭದ್ರತೆ ಮಾಡಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಮಧ್ಯಂತರ ಬಜೆಟ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಸಂಸದ ಡಿ.ಕೆ. ಸುರೇಶ್, ಭಾರತ ವಿಭಜನೆ ಬಗ್ಗೆ ಮಾತನಾಡಿದ್ದರು. ಇದಕ್ಕೀಗ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.
ಡಿ.ಕೆ. ಸುರೇಶ್ ಹೇಳಿದ್ದೇನು?
ಸಂಸದ ಡಿ.ಕೆ. ಸುರೇಶ್ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡುವಾಗ, ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಬಜೆಟ್ ಅನ್ನು ಖಂಡಿಸಿದ್ದಾರೆ. ಅಲ್ಲದೆ, ಉತ್ತರ ಭಾರತ ಹಾಗೂ ದಕ್ಷಿಣ ಭಾರತ ಎಂಬುದಾಗಿ ತಾರತಮ್ಯ ಮಾಡುತ್ತಿದ್ದು, ಹೀಗೇ ಮುಂದುವರಿದರೆ ದೇಶವನ್ನು ವಿಭಜನೆ ಮಾಡಬೇಕಾಗುತ್ತದೆ. ದಕ್ಷಿಣ ಭಾರತದ ಹಣವನ್ನು ಉತ್ತರ ಭಾರತಕ್ಕೆ ಕೊಡುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕವಾಗಿ ತೊಂದರೆಯಾಗುತ್ತಿದೆ. ಹೀಗೆ ಮುಂದುವರಿದರೆ ದಕ್ಷಿಣ ಭಾರತ ಬೇರೆ ದೇಶ ಆಗಬೇಕು ಎಂಬ ಕೂಗು ಎತ್ತಬೇಕಾದ ಅನಿವಾರ್ಯತೆ ಬರಲಿದೆ ಎಂದು ಡಿ.ಕೆ. ಸುರೇಶ್ ಎಚ್ಚರಿಕೆ ನೀಡಿದ್ದಾರೆ.
ಡಿ.ಕೆ ಸುರೇಶ್ ಸಂಸದರಾಗಿದ್ದರೂ ಸಹ ಭಾರತವನ್ನು ವಿಭಜಿಸಬೇಕೆಂದಿದ್ದಾರೆ. ಈ ಮೂಲಕ ಪ್ರತ್ಯೇಕವಾದಿ ಶಕ್ತಿಗಳಿಗೆ ಕುಮ್ಮಕ್ಕು ಕೊಡುವ ಮೂಲಕ ದೇಶದ ಸಂವಿಧಾನಕ್ಕೆ ಅಗೌರವ ತೋರಿಸಿದ್ದಾರೆ. ಇದರಿಂದ ಪ್ರತ್ಯೇಕವಾದಿಗಳಿಗೂ ಡಿ.ಕೆ ಸುರೇಶ್ ಅವರಿಗೂ ಯಾವುದೇ ವ್ಯತ್ಯಾಸ ಕಾಣುತ್ತಿಲ್ಲ ಎನ್ನುವ ಕೂಗು ಕೇಳಿ ಬರುತ್ತಿದೆ.