ದಾವಣಗೆರೆ : ರಾಜ್ಯ ಸರ್ಕಾರ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ಮೇಲೆ ದಾಖಲು ಮಾಡಿರುವ ಪ್ರಕರಣವನ್ನು ವಾಪಸ್ ಪಡೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ. ಪರಮೇಶ್ವರ್ ಕ್ಷಮೆ ಯಾಚಿಸಬೇಕು ಎಂದು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕ ಪ್ರಸನ್ನ ಕುಮಾರ್ ಆಗ್ರಹಿಸಿದ್ದಾರೆ.
ಈಶ್ವರಪ್ಪ ಹಿಂದುಳಿದ ವರ್ಗಗಳ ನಾಯಕರಾಗಿದ್ದು ಪೊಲೀಸ್ ಪ್ರಕರಣ ದಾಖಲಿಸಿ ನೋಟಿಸ್ ನೀಡುವ ಮೂಲಕ ದಬ್ಬಾಳಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಪಕ್ಷದ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಈಶ್ವರಪ್ಪ ತಪ್ಪು ಹೇಳಿಕೆ ನೀಡಿಲ್ಲ. ಯಾರಿಗೂ ಗುಂಡಿನಿಂದ ಹೊಡೆಯಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿಲ್ಲ. ದೇಶ ವಿರೋಧಿ ಚುಟುವಟಿಕೆ ಮಾಡುವವರನ್ನು ಶಿಕ್ಷೆಗೆ ಒಳಪಡಿಸುವ ಕಾನೂನು ಜಾರಿಗೊಳಿಸಬೇಕು ಎಂದು ಹೇಳಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.
ದೇಶವನ್ನು ತುಂಡರಿಸಬೇಕು ಎಂದು ಹೇಳಿಕೆ ನೀಡಿರುವ ಸಂಸದ ಡಿ.ಕೆ. ಸುರೇಶ್ ವಿರುದ್ಧ ಏಕೆ ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದಿದ್ದಾರೆ.
ಈಶ್ವರಪ್ಪ ಅವರ ಮನೆಗೆ ಮುತ್ತಿಗೆ ಹಾಕಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸುತ್ತೀರಾ?, ಕುಕ್ಕರ್ ಸ್ಫೋಟ ಮಾಡಿದ ಪ್ರಕರಣದಲ್ಲಿ ಆರೋಪಿಯ ಪರವಾಗಿ ಅಮಾಯಕ ಎಂಬ ಹೇಳಿಕೆ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೇಲೆ ಪ್ರಕರಣ ದಾಖಲಿಸುತ್ತೀರಾ ?, ಡಿ.ಕೆ. ಸುರೇಶ್ ದೇಶ ಒಡೆಯುವ ಹೇಳಿಕೆ ನೀಡಿದ್ದಾರೆ ಮತ್ತು ವಿನಯ್ ಕುಲಕರ್ಣಿ ಅವರ ಮೇಲೆ ಯಾವ ರೀತಿಯ ಪ್ರಕರಣಗಳು ದಾಖಲು ಮಾಡುತ್ತೀರಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಸನ್ನ ಕುಮಾರ್ ಪ್ರಶ್ನಿಸಿದ್ದಾರೆ.