ಮದ್ದೂರು: ಗ್ರಾಮಗಳ ಸ್ವಚ್ಛತೆಯಲ್ಲಿ ಮಹಿಳೆಯರ ಪಾತ್ರ ಅಪಾರವಾಗಿದ್ದು, ಎಲ್ಲೆಂದರಲ್ಲಿ ಕಸ ಬಿಸಾಡದೆ ಶುಚಿತ್ವಕ್ಕೆ ಹೆಚ್ಚಿನ ಮಹತ್ವ ನೀಡಬೇಕೆಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲೂಕಿನ ಕದಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಸಳ್ಳಿದೊಡ್ಡಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಘನತ್ಯಾಜ್ಯ ವಿಲೇವಾರಿ ಘಟಕ ಹಾಗೂ ಮಹಿಳಾ ಗ್ರಾಮ ಸಭೆಗೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು. ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳುವ ಮೂಲಕ ರೋಗ ರುಜಿನಗಳು ಬಾರದಂತೆ ಮುನ್ನೆಚ್ಚರಿಕಾ ಕ್ರಮ ಅನುಸರಿಸಬೇಕು ಎಂದರು.
ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕೆಂಬ ಉದ್ದೇಶದಿಂದ ಸರ್ಕಾರ ಹಲವು ಸೌಲಭ್ಯಗಳನ್ನು ಜಾರಿಗೊಳಿಸುತ್ತಿದ್ದು, ಅಧಿಕಾರಿಗಳು ಸಮರ್ಪಕವಾಗಿ ಜಾರಿಗೊಳಿಸುವ ಮೂಲಕ ಗ್ರಾಮದ ಶ್ರೇಯೋಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸಬೇಕು ಎಂದರು.
ಕದಲೂರು ಗ್ರಾಪಂ ವ್ಯಾಪ್ತಿಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ಬಿಡುಗಡೆಯಾಗಲಿದ್ದು, ನನೆಗುದಿಗೆ ಬಿದ್ದಿರುವ ರಸ್ತೆ, ಚರಂಡಿ, ಕುಡಿಯುವ ನೀರು ಮತ್ತು ಇತರ ಸೌಲಭ್ಯಗಳನ್ನು ಕಲ್ಪಿಸಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿಸಲು ಈಗಾಗಲೇ ಕ್ರಿಯಾ ಯೋಜನೆ ತಯಾರಿಸಲಾಗಿದೆ ಎಂದರು.
ಕದಲೂರು ಗ್ರಾಪಂ ಅಧ್ಯಕ್ಷ ತಿಮ್ಮೇಗೌಡ ಮಾತನಾಡಿದರು. ಉಪಾಧ್ಯಕ್ಷೆ ಶಾಂತಮ್ಮ , ಸದಸ್ಯರಾದ ಸರೋಜಮ್ಮ , ಜಯಲಕ್ಷ್ಮಮ್ಮ, ಸ್ವಾತಿ, ಶಿವಣ್ಣ, ಸಿ.ಟಿ.ತಿಮ್ಮೇಗೌಡ, ಸುನೀಲ್, ಲೋಕೇಶ್, ತಾಪಂ ಇ.ಒ ಮಂಜುನಾಥ್, ನರೇಗಾ ಸಹಾಯಕ ನಿರ್ದೇಶಕ. ಟಿ.ವಿ ಮಂಜುನಾಥ್, ವೈದ್ಯಾಧಿಕಾರಿ ಭಾರ್ಗವಿ, ಜಿಲ್ಲಾ ಸಂಯೋಜಕಿಯರಾದ ನೇತ್ರಾ, ವಸತಿ, ನೋಡಲ್ ಅಧಿಕಾರಿ ಕುಮಾರ್, ಪಿ.ಡಿ.ಒ ಜಗದೀಶ್ ಇದ್ದರು.