ಬಾಳೆಹೊನ್ನೂರು: ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ನನಗೆ ಹಿಂದಿ ಬರುವುದಿಲ್ಲ ಎಂದು ಹೇಳಿದ್ದಾರೆ. ನಾನು ಸಾಮಾನ್ಯ ಕೂಲಿ ಮಾಡುವ ಕುಟುಂಬದಲ್ಲಿ ಹುಟ್ಟಿ ಬೆಳೆದವನು. ಹಾಗಾಗಿ ಇಂಗ್ಲಿಷ್ ಮತ್ತು ಹಿಂದಿ ಜಯಪ್ರಕಾಶ್ ಹೆಗ್ಡೆ ಅವರಷ್ಟು ನನಗೆ ಬರುವುದಿಲ್ಲ. ಹೆಗ್ಡೆ ಅವರು ನನ್ನ ಮೇಲಿನ ಪ್ರೀತಿ, ಅಭಿಮಾನದಿಂದ ನಾನು ಮುಜುಗರ ಅನುಭವಿಸಬಾರದು ಎಂದು ಹೇಳಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಹಿರಿಯರಾದ ಜಯಪ್ರಕಾಶ್ ಹೆಗ್ಡೆ ಅವರಲ್ಲಿ ನಾನು ಈ ಬಗ್ಗೆ ಮನವರಿಕೆ ಮಾಡಲಿದ್ದು, ನಿಮ್ಮ ಪ್ರೀತಿ ನನಗೆ ಅರ್ಥವಾಗಿದೆ. ಲೋಕಸಭೆ ನಾನು ಆಯ್ಕೆಗೊಂಡ ಬಳಿಕ ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸುತ್ತೇನೆ ಮತ್ತು ಸದನ ಪ್ರವೇಶಿಸಿದ ಆರು ತಿಂಗಳಲ್ಲಿ ಹಿಂದಿ ಕಲಿತು ಅವರಿಗೆ ಸಮಾಧಾನವಾಗುವ ರೀತಿಯಲ್ಲಿ ಭಾಷಣ ಮಾಡಿ ಬರುತ್ತೇನೆ ಎಂದು ಹೆಗ್ಡೆ ಹೇಳಿಕೆಗೆ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದರು.
ರಂಭಾಪುರಿ ಜಗದ್ಗುರುಗಳ ಆಶೀರ್ವಾದ: ರಂಭಾಪುರಿ ಪೀಠಕ್ಕೆ ಭೇಟಿ ನೀಡಿದ ಕೋಟ ಶ್ರೀನಿವಾಸ ಪೂಜಾರಿ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ದೇವಾಲಯ, ಜಗದ್ಗುರು ರೇಣುಕಾಚಾರ್ಯ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ದರ್ಶನ ಮತ್ತು ಆಶೀರ್ವಾದ ಪಡೆದರು. ಶ್ರೀಗಳು ಫಲ ಮಂತ್ರಾಕ್ಷತೆ ನೀಡಿ ಹಾರೈಸಿದರು.