ಹಿರಿಯಡ್ಕ: ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿದ್ದ ಶಿವಮೊಗ್ಗ ಮೂಲದ ವಿಚಾರಣಾಧೀನ ಕೈದಿ ಮಂಗಳವಾರ ಬೆಳಗ್ಗಿನ ಜಾವ ಮೃತಪಟ್ಟಿದ್ದಾರೆ.
ಶಿವಮೊಗ್ಗ ಟಿಪ್ಪು ನಗರ ನಿವಾಸಿ ಸಯ್ಯದ್ ಮೆಹಬೂಬ್ ಪಾಷಾ (58) ಮೃತ ಕೈದಿ. ಜೂನ್ 2019ರಿಂದ ಬಂಧನದಲ್ಲಿದ್ದ ಅವರು ಮಧುಮೇಹ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದು, ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಹಲವು ಬಾರಿ ಚಿಕಿತ್ಸೆ ಕೊಡಿಸಲಾಗಿತ್ತು. ಮಂಗಳವಾರ ಬೆಳಗ್ಗಿನ ಜಾವ 12.35ಕ್ಕೆ ತೀವ್ರ ಅಸ್ವಸ್ಥಗೊಂಡ ಇವರನ್ನು ಜೈಲರ್ ಹಾಗೂ ಕಾರಾಗೃಹ ಸಿಬ್ಬಂದಿ ಬೆಂಗಾವಲಿನಲ್ಲಿ ಅಂಬ್ಯುಲೆನ್ಸ್ನಲ್ಲಿ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಪರೀಕ್ಷಿಸಿದ ವೈದ್ಯರು ಕೈದಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ಜಿಲ್ಲಾ ಕಾರಗೃಹದ ಅಧೀಕ್ಷಕ ಶ್ರೀನಿವಾಸ ಲಿಖಿತ ಮಾಹಿತಿ ನೀಡಿದ್ದಾರೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.