ಬಾಗಲಕೋಟೆ: ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದ್ದು, ಮಂಗಳವಾರ ಎರಡು ಕೋಮಿನ ನಡುವೆ ಕಲ್ಲು ತೂರಾಟ ನಡೆದಿದೆ. ಕಾಲೇಜಿಗೆ ರಜೆ ಘೋಷಣೆ ಆಗಿದೆ. ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮನೆಗೆ ಕರೆದೊಯ್ಯಲು ಬಂದ ಬಸ್ಗಳನ್ನು ಕಾಲೇಜು ಒಳಗೆ ಹೋಗದಂತೆ ಹೊರಗಿನಿಂದ ತಡೆದ ಕಿಡಿಗೇಡಿಗಳಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು.
ರಾಜ್ಯದಲ್ಲಿ ತಾರಕಕ್ಕೇರುತ್ತಿರುವ ಹಿಜಾಬ್ ಗಲಾಟೆಯನ್ನು ನಿಯಂತ್ರಿಸಲು ಮುಂದಾದ ಸರ್ಕಾರ ಫೆ. 5ರಂದು ಸುತ್ತೋಲೆ ಹೊರಡಿಸಿ, ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರ ಧರಿಸುವುದು ಕಡ್ಡಾಯ. ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿರ್ಧರಿಸಿರುವ ಸಮವಸ್ತ್ರ ಧರಿಸಬೇಕು. ಪದವಿಪೂರ್ವ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಆಯಾ ಕಾಲೇಜಿನ ಅಭಿವೃದ್ಧಿ ಸಮಿತಿ ಅಥವಾ ಆಡಳಿತ ಮಂಡಳಿಯ ಮೇಲ್ವಿಚಾರಣಾ ಸಮಿತಿ ನಿರ್ಧರಿಸಿರುವ ವಸ್ತ್ರ ಧರಿಸಬೇಕು ಎಂದು ಸೂಚಿಸಿದೆ. ಆದರೂ ಬನಹಟ್ಟಿಯಲ್ಲಿ ಈ ನಿಯಮ ಉಲ್ಲಂಘಿಸಿ ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬಂದಿದ್ದಾರೆ. ಇದಕ್ಕೆ ಪ್ರತಿಯಾಗಿ ಹಿಂದು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದು, ಪರ-ವಿರೋಧ ಘೋಷಣೆ ಘೋಷಣೆ, ಪ್ರತಿಭಟನೆ ನಡೆದಿದೆ.
ಎರಡೂ ಧರ್ಮದ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ಬೆಳೆದು ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿತ್ತು. ಪರಿಸ್ಥಿತಿ ನಿಯಂತ್ರಿಸಲು ಕಾಲೇಜಿಗೆ ರಜೆ ಘೋಷಿಸಿದ ಆಡಳಿತ ಮಂಡಳಿ, ವಿದ್ಯಾರ್ಥಿಗಳನ್ನು ಮನೆಗೆ ಕಳಿಸಲು ಹರಸಾಹಸಪಟ್ಟರು.
ಈ ವೇಳೆ ಕಲ್ಲು ತೂರಾಟ ನಡೆದಿದೆ. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಜಮಖಂಡಿ-ಕುಡಚಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಕೆಲ ಕಾಲ ಪ್ರತಿಭಟನೆ ನಡೆಸಿದರು. ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಗಲಾಟೆ, ಕಲ್ಲು ತೂರಾಟ ಹಿನ್ನೆಲೆ ಕಾಲೇಜಿನ ಒಳಗೆ ಇರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನ ಬಸ್ ಮೂಲಕ ಸುರಕ್ಷಿತವಾಗಿ ಮನೆಗೆ ತಲುಪಿಸಲು ಕಾಲೇಜು ಸಿಬ್ಬಂದಿ ಮುಂದಾಗುತ್ತಿದ್ದಂತೆ ಹೊರಗಿದ್ದವರು ಬಸ್ ತಡೆದು ಗಲಾಟೆಗೆ ಮುಂದಾದರು. ಈ ವೇಳೆ ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ ಪೊಲೀಸರು, ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸುತ್ತಿದ್ದಾರೆ.
ರಾಜ್ಯದ ಹಲವು ಜಿಲ್ಲೆಗೆ ವ್ಯಾಪಿಸಿದ ಹಿಜಾಬ್ ವಿವಾದ: ಕಾಲೇಜುಗಳ ಬಳಿ ಬಿಗುವಿನ ವಾತಾವರಣ ಸೃಷ್ಟಿ