ಕೊಪ್ಪಳ: ಲೋಕಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಐಎನ್ಡಿಐಎಗೆ ಬೆಂಬಲ ಘೋಷಿಸಿದೆ. ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಪರವಾಗಿ ಮತಯಾಚನೆ ಮಾಡಲಿದ್ದೇವೆ ಎಂದು ಎಎಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರ್ಜುನ ಹಲಗಿಗೌಡರ್ ತಿಳಿಸಿದರು.
ಕೇಂದ್ರ ಸರ್ಕಾರ ಜಾತಿ, ಧರ್ಮ ಆಧಾರದಲ್ಲಿ ರಾಜಕೀಯ ಮಾಡುತ್ತಿದೆ. ಕೋಮುವಾದ ವಿಷ ಬೀಜ ಬಿತ್ತುತ್ತಿದ್ದು, ಅಭಿವೃದ್ಧಿ ಮಾಡುತ್ತಿಲ್ಲ. ಹೀಗಾಗಿ ನಾವು ಕಾಂಗ್ರೆಸ್ಗೆ ಬೆಂಬಲ ನೀಡಿದ್ದೇವೆ. ದೆಹಲಿ, ಪಂಜಾಬ್, ಹರಿಯಾಣ ಸೇರಿ 25 ಕ್ಷೇತ್ರಗಳಲ್ಲಿ ಎಎಪಿ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಎಲ್ಲಡೆ ಗೆಲ್ಲುವ ವಿಶ್ವಾಸವಿದೆ. ಕೊಪ್ಪಳದಲ್ಲಿ ರಾಜಶೇಖರ ಹಿಟ್ನಾಳ ಪರ ಮತ ಯಾಚಿಸಲಿದ್ದೇವೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಬಿಜೆಪಿ ಚುನಾವಣಾ ಬಾಂಡ್ಗಳ ಮೂಲಕ ಸಾಕಷ್ಟು ಭ್ರಷ್ಟಾಚಾರ ನಡೆಸಿದೆ. ಸವೋಚ್ಛ ನ್ಯಾಯಾಲಯ ಛೀಮಾರಿ ಹಾಕಿದೆ. ಹೀಗಿದ್ದರೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತೆ ಬಾಂಡ್ ತರುವುದಾಗಿ ಹೇಳಿ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ಎಂ.ಕಾಟನ್ ಪಾಷಾ ಮಾತನಾಡಿ, ಈ ಬಾರಿ ಮೋದಿ ಅಲೆ ಇಲ್ಲ. ಗ್ಯಾರಂಟಿ ಯೋಜನೆಗಳು ಜನರಿಗೆ ವರವಾಗಿವೆ. ಐಎನ್ಡಿಐಎ ಒಕ್ಕೂಟ ಅಧಿಕಾರಕ್ಕೆ ಬರವುದು ಪಕ್ಕಾ ಎಂದರು. ನಗರಸಭೆ ಮಾಜಿ ಸದಸ್ಯ ರಾಜಶೇಖರ ಆಡೂರು ಮಾತನಾಡಿದರು. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರ್ ಪಾಷಾ ಪಲ್ಟನ್, ಎಎಪಿ ಜಿಲ್ಲಾಧ್ಯಕ್ಷ ಕನಕಪ್ಪ ಮಳಗಾವಿ, ಮುಖಂಡ ಜಿಲಾನ್ ಇದ್ದರು.