ಶಿವಮೊಗ್ಗ: ಆಹಾರ ವಸ್ತುಗಳ ಮೇಲೆ ಜಿಎಸ್ಟಿ ವಿಧಿಸುವ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಉಂಟು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಆಮ್ ಆದ್ಮಿ ಪಾರ್ಟಿ ಮುಖಂಡರು ಗುರುವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಎನ್ಡಿಎ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಹಲವಾರು ಭರವಸೆಗಳನ್ನು ನೀಡಿತ್ತು. ಬಡ ಜನರ ಬದುಕು ಉತ್ತಮಗೊಳಿಸಲು ಆದ್ಯತೆ ನೀಡಲಾಗುವುದು ಎಂದು ಘೋಷಿಸಿತ್ತು. ಈಗ ಅದೆಲ್ಲವೂ ಹುಸಿಯಾಗುತ್ತಿದೆ. ಬೆಲೆ ಏರಿಕೆ ವಿರುದ್ಧ ಹೋರಾಟ ರೂಪಿಸಿ ಅಧಿಕಾರ ಪಡೆದ ಬಿಜೆಪಿ ಈಗ ಬೆಲೆ ಏರಿಕೆ ಮಾಡುತ್ತಿರುವುದು ದುರದೃಷ್ಟಕರ ಎಂದು ಹೇಳಿದರು.
ಅವೈಜ್ಞಾನಿಕವಾಗಿ ಹೆಚ್ಚಳ ಮಾಡಿರುವ ಅಗತ್ಯ ವಸ್ತುಗಳ ಮೇಲಿನ ತೆರಿಗೆಯನ್ನು ಕೇಂದ್ರ ಸರ್ಕಾರ ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾಧ್ಯಂತ ಆಪ್ನಿಂದ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಆಪ್ ಮುಖಂಡರಾದ ಏಳುಮಲೈ, ಎಸ್.ಮುರುಗನ್, ಕೆ.ಕಿರಣ, ಡಾ.ಸುರೇಶ್ಬಾಬು, ಡಿ.ಆರ್.ಲಕ್ಷ್ಮೀಶ, ಎಸ್.ರಾಮು ಮುಂತಾದವರು ಪ್ರತಿಭಟನೆಯಲ್ಲಿದ್ದರು.