ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ಗುಡಿ ಸಮೀಪ ಲಾರಿ ಹಾಗೂ ಬಸ್ ನಡುವೆ ಭಾನುವಾರ ಬೆಳಗ್ಗೆ ಅಪಘಾತ ಸಂಭವಿಸಿ ಬಸ್ ಚರಂಡಿಗೆ ಉರುಳಿ ಬಿದ್ದಿದೆ. ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಸುಮಾರು 2 ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿ ವಾಹನಗಳು ಸಾಲುಗಟ್ಟಿ ನಿಂತು ಪ್ರಯಾಣಕರು ಪರದಾಡುವಂತಾಯಿತು. ಭಾನುವಾರವಾದ ಕಾರಣ ಹೆಚ್ಚಿನ ವಾಹನ ದಟ್ಟಣೆ ಇತ್ತು. ಘಾಟಿ ಪ್ರದೇಶದಲ್ಲಿ ಭಾರಿ ಮಳೆ ಹಾಗೂ ಮಬ್ಬು ಕವಿದ ವಾತಾವರಣವಿದ್ದು, ಆಗಾಗ ಅಪಘಾತಗಳು ಸಂಭವಿಸುತ್ತಿವೆ. ಸ್ಥಳಕ್ಕೆ ಮೂಡಿಗೆರೆ ಪೊಲೀಸರು ಹಾಗೂ ಸ್ಥಳೀಯರು ಆಗಮಿಸಿ, ಸುಗಮ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು.