ಬೆಂಗಳೂರು: ಕಾಂಗ್ರೆಸ್ನ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಮನೆಯಲ್ಲಿ 354 ಕೋಟಿ ರೂ.ಗೂ ಹೆಚ್ಚು ಹಣ ಸಿಕ್ಕಿದ್ದು, ಭ್ರಷ್ಟಾಚಾರ ಯಾರೇ ಮಾಡಿದ್ದರೂ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅಭಿಪ್ರಾಯಪಟ್ಟರು.
ಇದನ್ನೂ ಓದಿ: ಸದನದಲ್ಲಿ ವಿಪಕ್ಷ ನಾಯಕರಿಗೆ ಜಾಡಿಸಿದ ಸಿದ್ದರಾಮಯ್ಯ
ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಪ್ಪು ಯಾರೇ ಮಾಡಿದರೂ ಸರಿ ಎನ್ನಲಾಗದು. ಅದು ತಪ್ಪೇ ಆಗುತ್ತದೆ. ದೇಶದ ಎಲ್ಲ ಭ್ರಷ್ಟರ ವಿರುದ್ಧ ತನಿಖೆ ಆಗಬೇಕು. ಕರ್ನಾಟಕ, ತೆಲಂಗಾಣ, ಒಡಿಶಾ, ಪಶ್ಚಿಮ ಬಂಗಾಳಲದ ಕಾಂಗ್ರೆಸ್ ಮುಖಂಡರನ್ನು ಮಾತ್ರ ಏಕೆ ಗುರಿ ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕರ ಮೇಲೆ ಮಾತ್ರ ಐಟಿ ದಾಳಿಗಳು ನಡೆಯುತ್ತಿರುವುದೇಕೆ? ಬಿಜೆಪಿ ಪಕ್ಷದಲ್ಲಿ ಯಾರು ಭ್ರಷ್ಟರೇ ಇಲ್ಲವೇ ಎಂದು ಪ್ರಶ್ನಿಸಿದರು.
ಯಡಿಯೂರಪ್ಪನವರ ಮೇಲೆ ಸಹ ಆರೋಪಗಳಿದ್ದವು. ಪ್ರಧಾನಿ ಮೋದಿ ಅವರು ಅವರ ವಿರುದ್ಧ ಸಹ ಕ್ರಮ ಜರುಗಿಸಬೇಕು. ಪ್ರಧಾನಿಯವರು ನುಡಿದಂತೆ ವಿದೇಶದಲ್ಲಿ ಇರುವ ಕಪ್ಪು ಹಣ ವಾಪಸ್ ತರಬೇಕು. ಪ್ರತಿ ಖಾತೆಗೆ 15 ಲಕ್ಷ ರೂ. ಹಾಕಬೇಕು ಎಂದು ಒತ್ತಾಯಿಸಿದರು.
ಇನ್ನು ವಿರೋಧ ಪಕ್ಷ ನಾಯಕ ಆರ್.ಅಶೋಕ್, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಒಬ್ಬರ ಮೇಲೆ ಒಬ್ಬರು ಕೆಸರೆರೆಚಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ವಿಪಕ್ಷವಾಗಿ ಬಿಜೆಪಿ ಬರ ಪರಿಹಾರಕ್ಕೆ ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆ ಮಾಡಿಸಲು ಯಾವ ಪ್ರಯತ್ನವನ್ನು ಮಾಡುತ್ತಲೇ ಇಲ್ಲ ಎಂದು ಟೀಕಿಸಿದರು.
ಜೆಡಿಎಸ್ ಬಿಜೆಪಿ ಬಿ ಟೀಮ್ ಆಗಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಎ ಟೀಮ್ ಗಿಂತ ಬಿ ಟೀಮ್ ಸ್ಟ್ರಾಂಗ್ ಎಂದು ತೋರಿಸಲು ಕಾಂಗ್ರೆಸ್ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆ ನಂತರ 50 ಜನ ಶಾಸಕರು ಪಕ್ಷಾಂತರ ಮಾಡುತ್ತಾರೆ ಎಂದಿರುವುದು ಸತ್ಯಕ್ಕೆ ದೂರವಾದ ಮಾತು ರಾಜ್ಯದ ಜನ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ನೀಡಿದ್ದು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ 20 ಅಭ್ಯರ್ಥಿಗಳನ್ನು ಗೆಲ್ಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.