More

    ಬಾಲಕಾರ್ಮಿಕರ ನಿಯಂತ್ರಣಕ್ಕೆ ಕ್ರಮ ಅಗತ್ಯ: ಡಾ. ಆರ್.ಸೆಲ್ವಮಣಿ

    ಶಿವಮೊಗ್ಗ: ಶಿಕ್ಷಣ ವಂಚಿತ ಮಕ್ಕಳು ಕಾರ್ಖಾನೆ, ಗ್ಯಾರೇಜು, ಹೋಟೆಲ್ ಮತ್ತಿತರ ಕೆಲಸ-ಕಾರ್ಯಗಳಲ್ಲಿ ತೊಡಗಿಕೊಂಡು ತಮ್ಮ ಅಮೂಲ್ಯವಾದ ಬಾಲ್ಯವನ್ನು ಹಾಳುಮಾಡಿಕೊಳ್ಳುತ್ತಿರುವುದು ಬೇಸರ ಸಂಗತಿ. ಅಂತಹ ಮಕ್ಕಳನ್ನು ಗುರುತಿಸಿ ಕೆಲಸಕ್ಕೆ ಬಳಸಿಕೊಳ್ಳುವವರ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಸಂಬಂಧಿಸಿದ ಅಧಿಕಾರಿಗೆ ಸೂಚಿಸಿದರು.

    ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾಮಟ್ಟದ ಕಾರ್ಯಪಡೆ ಸಮಿತಿ ಸಭೆ ನಡೆಸಿದ ಅವರು, ಬಾಲ ಕಾರ್ಮಿಕರನ್ನು ಬಾಲಕಾರ್ಮಿಕ ಪದ್ಧತಿಯಿಂದ ಮುಕ್ತಗೊಳಿಸಿ ಶಿಕ್ಷಣದ ಮುಖ್ಯವಾಹಿನಿಗೆ ಕರೆ ತರುವಲ್ಲಿ ಯತ್ನಿಸದಿದ್ದರೆ ಭವಿಷ್ಯದಲ್ಲಿ ಸಮಾಜಘಾತಕ ಚಟುವಟಿಕೆಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಅಲ್ಲದೇ ಸಮಾಜಕ್ಕೆ ಕಂಟಕಪ್ರಾಯರಾಗುವ ಸಂಭವವಿದೆ ಎಂದು ಆತಂಕ ವ್ಯಕ್ತಪಡಿಸಿದರು.
    ಕಳೆದ ಕೆಲವು ವರ್ಷಗಳಲ್ಲಿ ಬಾಲಕಾರ್ಮಿಕರ ಸಂಖ್ಯೆ ಅತೀವ ಕಡಿಮೆಯಾಗಿದೆ. ಆದರೂ ಜಿಲ್ಲಾ ಪಂಚಾಯಿತಿಯ ಸಹಕಾರ ಪಡೆದು ಪಂಚಾಯಿತಿ ಮಟ್ಟದಲ್ಲಿಯೂ ಬಾಲಕಾರ್ಮಿಕರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ತುರ್ತು ಅಗತ್ಯವಿದೆ ಎಂದು ಹೇಳಿದರು.
    ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕುಗಳ ಗ್ರಾಮಾಂತರ ಪ್ರದೇಶಗಳಲ್ಲಿ ಹೊರರಾಜ್ಯಗಳಿಂದ ವಲಸೆ ಬಂದಿರುವ ಕಾರ್ಮಿಕರ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ದೂರುಗಳು ಕೇಳಿ ಬರುತ್ತಿವೆ. ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಸಕಾಲದಲ್ಲಿ ತಪಾಸಣೆ ನಡೆಸಿ, ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
    ಜಿಲ್ಲಾ ಕಾರ್ಮಿಕ ಅಧಿಕಾರಿ ಸುಮಾ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸುಜಾತಾ, ಜಿಲ್ಲಾ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಗಣೇಶ್, ಬಾಲಕಾರ್ಮಿಕ ಯೋಜನಾಧಿಕಾರಿ ರಾಘವೇಂದ್ರ ಸೇರಿ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts