ಬೆಂಗಳೂರು: ಸ್ಯಾಂಡಲ್ವುಡ್ನ ನಟ ಹಾಗೂ ಸಾಮಾಜಿಕ ಹೋರಾಟಗಾರ ಎನಿಸಿಕೊಂಡಿರುವ ಚೇತನ್ ಸದಾ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಲೇ ಇರುತ್ತಾರೆ. ಅವರ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗುತ್ತಲೇ ಇರುತ್ತವೆ. ಸದ್ಯ, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಪ್ರಮಾಣವಚನ ಹಾಗೂ ನೂತನ ಸಚಿವ ಸತೀಶ ಜಾರಕಿಹೊಳಿ ವಿರುದ್ಧ ಕಟುವಾಗಿ ಟೀಕಿಸಿದ್ದಾರೆ.
ಕಳೆದ ಬಾರಿ ಸಿದ್ದರಾಮಯ್ಯ ಸತ್ಯದ ಹೆಸರಿನಲ್ಲಿ ಅಧಿಕಾರ ಸ್ವೀಕರಿಸಿದ್ದರು. ಆದರೆ ಈ ಸಲ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಾಗಾಗಿ ನಟ ಚೇತನ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ‘ವಿಚಾರವಾದಿ ಎಂದು ಕರೆಸಿಕೊಳ್ಳುವ ಸಿದ್ದರಾಮಯ್ಯ ಅವರು ಕರ್ನಾಟಕದ ಸಿಎಂ ಆಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರಾ? ಎಂಬ ಪ್ರಶ್ನೆಯನ್ನು ಎತ್ತಿದ್ದಾರೆ. ಜತೆಗೆ ಯಾವ/ಯಾರು ದೇವರು? ದೇವರು ಎಲ್ಲಿದ್ದಾನೆ/ಳೆ/ರೆ? ಇದು ನಿರ್ದಿಷ್ಟವಾದ ಸೈದ್ಧಾಂತಿಕ ಆರಂಭವಲ್ಲ’ ಎಂದಿದ್ದಾರೆ.
ಜತೆಗೆ, ಶಾಸಕ ಸತೀಶ ಜಾರಕಿಹೊಳಿ ಅವರು ಬುದ್ಧ-ಬಸವ-ಅಂಬೇಡ್ಕರ್ ಅಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್ ಪಕ್ಷವು ತನ್ನ ಸ್ವ-ಲಾಭದಾಯಕ ರಾಜಕೀಯ ಅಧಿಕಾರಕ್ಕಾಗಿ ನಮ್ಮ ಸಮಾನತೆಯ ಐಕಾನ್ಗಳನ್ನು ಯಾವಾಗಲೂ ಹೈಜಾಕ್ ಮಾಡಿದೆ. ಎಸ್ಟಿ ನಾಯಕ ಸಮುದಾಯದ ಸತೀಶ್ ಜಾರಕಿಹೊಳಿ ಶೋಷಿತ ಎಸ್ಟಿಗಳಿಗೆ ಒಳಮೀಸಲಾತಿಯನ್ನು ಬೆಂಬಲಿಸುತ್ತಾರೆಯೇ? ಅಥವಾ ಬುದ್ಧ-ಬಸವ-ಅಂಬೇಡ್ಕರ್ ಕೇವಲ ಗಿಮಿಕ್ ಮಾತ್ರವೇ? ಎಂದು ಶಾಸಕ ಸತೀಶ ಜಾರಕಿಹೊಳಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.(ಏಜೆನ್ಸೀಸ್)