ನವದೆಹಲಿ: ನಿರ್ಭಯಾ ಪ್ರಕರಣದ ಅಪರಾಧಿ ವಿನಯ್ ಶರ್ಮಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿರಸ್ಕರಿಸಿದ ಬೆನ್ನಲ್ಲೇ ಇನ್ನೋರ್ವ ಅಪರಾಧಿ ಅಕ್ಷಯ್ ಠಾಕೂರ್ ಸಿಂಗ್ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿದ್ದಾನೆ.
ಅಕ್ಷಯ್ ಠಾಕೂರ್ ಸಿಂಗ್ ಈ ಹಿಂದೆ ಸುಪ್ರೀಂ ಕೋರ್ಟ್ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದ. ಆದರೆ ಆ ಪತ್ರವನನ್ನು ನಿನ್ನೆ ಸಂಜೆ ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಇದೀಗ ಅಪರಾಧಿ ರಾಷ್ಟ್ರಪತಿಗಳ ಮೊರೆ ಹೋಗಿದ್ದಾನೆ.
ಈ ಹಿಂದೆ ನೀಡಿದ್ದ ಆದೇಶದ ಪ್ರಕಾರ ಇಂದು (ಫೆ.1) ಅಪರಾಧಿಗಳಿಗೆ ಗಲ್ಲು ಶಿಕ್ಷೆಯಾಗಬೇಕಿತ್ತು. ಆದರೆ ಗಲ್ಲು ಶಿಕ್ಷೆಯನ್ನು ತಡೆಯಬೇಕು ಎಂದು ವಕೀಲ ಎ.ಪಿ.ಸಿಂಗ್ ದೆಹಲಿಯ ಪಟಿಯಾಲ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅಪರಾಧಿ ವಿನಯ್ ಶರ್ಮಾ ರಾಷ್ಟ್ರಪತಿಗಳಿಗೆ ಕ್ಷಮಾದಾನ ಪತ್ರ ಬರೆದಿದ್ದರಿಂದಾಗಿ ಶಿಕ್ಷೆಯನ್ನು ತಡೆಹಿಡಿಯಲಾಗಿತ್ತು. ಇಂದು ಮುಂಜಾನೆ ರಾಷ್ಟ್ರಪತಿಗಳು ವಿನಯ್ ಶರ್ಮಾ ಸಲ್ಲಿಸಿದ್ದ ಕ್ಷಮಾಧಾನ ಪತ್ರವನ್ನು ವಜಾ ಮಾಡಿದ್ದರು. ಅದರ ಬೆನ್ನಲ್ಲೇ ಇದೀಗ ಅಕ್ಷಯ್ ಠಾಕೂರ್ ಕೂಡ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾನೆ. (ಏಜೆನ್ಸೀಸ್)