ಚಿಕ್ಕಮಗಳೂರು: ನಗರದ ಪೊಲೀಸ್ ಬಡಾವಣೆ ಸಮೀಪವಿರುವ ಅಂಬೇಡ್ಕರ್ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರ ಮೇಲೆ ಶಿಕ್ಷಕಿ ವಿನಾಕಾರಣ ಹಲ್ಲೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಪಾಲಕರು ಹಾಗೂ ದಲಿತಪರ ಸಂಘಟನೆಗಳ ಕಾರ್ಯಕರ್ತರು ಮಂಗಳವಾರ ಶಾಲೆಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕಾಫಿ ಗೋಡಾನ್ನಲ್ಲಿ ನಡೆಯುತ್ತಿರುವ ಅಂಬೇಡ್ಕರ್ ವಸತಿ ಶಾಲೆಯ ಸುಮಾರು 40 ಮಕ್ಕಳು ಇದೇ ವೇಳೆ ಶಿಕ್ಷಕಿ ತಮ್ಮ ಮೇಲೆ ಕಾರಣವಿಲ್ಲದಿದ್ದರೂ ಹಲ್ಲೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಮೈಮೇಲೆ ಬಾಸುಂಡೆ ಬರುವಂತೆ ಹೊಡೆಯುತ್ತಿದ್ದಾರೆ ಎಂದು ಕಣ್ಣೀರು ಹಾಕಿದರು.
ಮೊರಾರ್ಜಿ ಶಾಲೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ ಎಂಬುದು ತಿಳಿಯುತ್ತಿದ್ದಂತೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಯೋಗೀಶ್ ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ಅವಲೋಕನ ಮಾಡಿದರು. ಇದೇ ವೇಳೆ ವಿದ್ಯಾರ್ಥಿನಿಯರು ಲಿಖಿತವಾಗಿ ಶಿಕ್ಷಕಿ ವಿರುದ್ಧ ದೂರನ್ನು ಯೋಗೀಶ್ ಅವರಿಗೆ ನೀಡಿದರು.
ಈ ವೇಳೆ ಮಾತನಾಡಿದ ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ, ಶಾಲೆಯಲ್ಲಿ ಮಕ್ಕಳ ಮೇಲೆ ನಿರಂತರವಾಗಿ ಹಲ್ಲೆ ನಡೆಸಲಾಗುತ್ತಿದೆ. ಜತೆಗೆ ಶಾಲೆಯಲ್ಲಿ ಮೂಲ ಸೌಕರ್ಯಗಳೇ ಇಲ್ಲವಾಗಿವೆ. ಸುಮಾರು 130ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವಾಸಿಸುತ್ತಿರುವ ಹಾಲ್ನಲ್ಲಿ ಹಾಸಿಗೆ ವ್ಯವಸ್ಥೆಯಿಲ್ಲ. ಶಾಲೆಯ ಶಿಕ್ಷಕರನ್ನು ಈ ಬಗ್ಗೆ ವಿಚಾರಿಸಿದರೆ ಸರ್ಕಾರಕ್ಕೆ ಅರ್ಜಿ ಸಲ್ಲಿಸಲಾಗಿದೆ ಎಂದು ಉಡಾಫೆ ಉತ್ತರ ನೀಡುತ್ತಿದ್ದಾರೆ. ಪಾಲಕರು ರಕ್ಷಣೆಯಿಲ್ಲದ ಶಾಲೆಯಲ್ಲಿ ಮಕ್ಕಳನ್ನು ಬಿಟ್ಟು ಹೋಗಲು ಹೆದರುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಡಿಎಸ್ಎಸ್ ಜಿಲ್ಲಾ ಸಂಚಾಲಕ ಕಬ್ಬಿಕೆರೆ ಮೋಹನ್ಕುಮಾರ್, ಮುಖಂಡರಾದ ಗಂಗಾಧರ್, ಹರೀಶ್ ಇತರರಿದ್ದರು.